ಹೊಸದಿಗಂತ ಡಿಜಿಟಲ್ ಡೆಸ್ಕ್:
ಖಾಸಗಿ ಚಿನ್ನಾಭರಣ ಕಂಪನಿಯಲ್ಲೇ ಕೆಲಸ ಮಾಡುತ್ತಿದ್ದ ಕಾರ್ಮಿಕರ ಗುಂಪೊಂದು ಲಕ್ಷಾಂತರ ಮೌಲ್ಯದ ಚಿನ್ನ ಕದ್ದು ಪರಾರಿಯಾಗಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣ ಸಂಬಂಧ ಒಂಬತ್ತು ಮಂದಿಯನ್ನು ಬಂಧಿಸಲಾಗಿದ್ದು, ಅವರ ಬಳಿಯಿಂದ ಸುಮಾರು ₹89 ಲಕ್ಷ ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.
ಕಂಪನಿಯೊಳಗೇ ಪ್ಲಾನ್ ಮಾಡಿ ಕಳ್ಳತನ
ನಗರದ ನಾಗರತ್ಪೇಟೆಯಲ್ಲಿರುವ ಚಿನ್ನಾಭರಣ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಆರೋಪಿಗಳು, ಕಳೆದ ಹಲವು ತಿಂಗಳುಗಳಿಂದ ಚಿನ್ನ ಮತ್ತು ಬೆಳ್ಳಿ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಮೇ 11ರ ರಾತ್ರಿ ಚಿನ್ನದ ಗಟ್ಟಿಗಳು ಹಾಗೂ ಆಭರಣಗಳನ್ನು ಕದ್ದು ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.
ಇದನ್ನೂ ಓದಿ:
ರೈಲಿನಲ್ಲಿ ಪರಾರಿಯಾಗುತ್ತಿದ್ದ ವೇಳೆ ಸಿಕ್ಕಿಬಿದ್ದರು
ಕಳ್ಳತನದ ಬಳಿಕ ಆರೋಪಿಗಳು ರೈಲಿನ ಮೂಲಕ ಪಶ್ಚಿಮ ಬಂಗಾಳಕ್ಕೆ ತೆರಳುತ್ತಿದ್ದ ಮಾಹಿತಿ ಪೊಲೀಸರಿಗೆ ಲಭ್ಯವಾಯಿತು. ಖಚಿತ ಮಾಹಿತಿ ಆಧರಿಸಿ ಆಂಧ್ರಪ್ರದೇಶದ ವಿಶಾಖಪಟ್ಟಣ ರೈಲು ನಿಲ್ದಾಣದ ಬಳಿ ಅವರನ್ನು ಬಂಧಿಸಲಾಯಿತು.
ಬಂಧಿತರಿಂದ 618 ಗ್ರಾಂ ಚಿನ್ನದ ಗಟ್ಟಿಗಳು ಮತ್ತು ಆಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದರ ಒಟ್ಟು ಮೌಲ್ಯ ಸುಮಾರು ₹89 ಲಕ್ಷ ಎಂದು ಅಂದಾಜಿಸಲಾಗಿದೆ.
‘ಸಂಬಳ ಸರಿಯಾಗಿ ಕೊಡಲಿಲ್ಲ’ ಆರೋಪ
ವಿಚಾರಣೆ ವೇಳೆ ಆರೋಪಿಗಳು, ಸಂಬಳ ನಿಯಮಿತವಾಗಿ ಸಿಗದ ಕಾರಣ ಹಾಗೂ ಬೇಗ ಹಣ ಸಂಪಾದಿಸುವ ಉದ್ದೇಶದಿಂದ ಕಳ್ಳತನ ನಡೆಸಿದ್ದಾಗಿ ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.



