ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬಿಹಾರ ರಾಜಕೀಯದಲ್ಲಿ ಮಹತ್ತರ ಬದಲಾವಣೆಯಾಗಿದ್ದು, ರಾಷ್ಟ್ರೀಯ ಜನತಾ ದಳದ (ಆರ್ಜೆಡಿ) ನಾಯಕಿ ರಿತು ಜೈಸ್ವಾಲ್ ಬಿಜೆಪಿಯತ್ತ ಮುಖಮಾಡಿದ್ದಾರೆ.
ಪಕ್ಷದ ವಿರುದ್ಧ ಬಂಡಾಯ
ಆರ್ಜೆಡಿ ಮಹಿಳಾ ಘಟಕದ ಅಧ್ಯಕ್ಷೆಯಾಗಿದ್ದ ರಿತು, ಕಳೆದ ಕೆಲವು ದಿನಗಳಿಂದ ಆರ್ಜೆಡಿ ನಾಯಕತ್ವ ,ಅದರಲ್ಲೂ ತೇಜಸ್ವಿ ಯಾದವ್ ವಿರುದ್ಧವೇ ಅಸಮಾಧಾನ ಹೊರಹಾಕಿದ್ದರು. 2025ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಆರ್ಜೆಡಿ ಟಿಕೆಟ್ ನೀಡಲು ನಿರಾಕರಿಸಿತ್ತು. ಇದರಿಂದ ಅಸಮಾಧಾನಗೊಂಡಿದ್ದ ಅವರು, ನಾಯಕತ್ವದ ವಿರುದ್ಧ ಬಂಡಾಯವೆದ್ದು ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕೆ ಧುಮುಕಿದ್ದರು. ಆದರೆ, ಸೋಲು ಅನುಭವಿಸಿದರು. ಇದರ ಬೆನ್ನಲ್ಲೇ ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದ್ದಾರೆ ಎಂದು ಆರ್ಜೆಡಿ, ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟಿಸಿತ್ತು.
ಬಿಜೆಪಿಗೆ ಸೇರ್ಪಡೆ
ಇದೀಗ ಆರ್ಜೆಡಿಗೆ ಗುಡ್ ಬೈ ಹೇಳುವ ಮೂಲಕ ಬಿಹಾರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸಂಜಯ್ ಸರೋಗಿ ಅವರ ಸಮ್ಮುಖದಲ್ಲಿ ರಿತು ಜೈಸ್ವಾಲ್ ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರಿಕೊಂಡರು.
ಪ್ರಧಾನಿ ಮೋದಿ ಆಡಳಿತಕ್ಕೆ ಮೆಚ್ಚುಗೆ
ಬಳಿಕ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರದ ನೀತಿಗಳನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಬಿಜೆಪಿ ಯಾವಾಗಲೂ ರಾಷ್ಟ್ರ ಮೊದಲು ಎಂಬ ನೀತಿಯೊಂದಿಗೆ ಕೆಲಸ ಮಾಡುತ್ತದೆ ತಿಳಿಸಿದರು.
ಪ್ರಧಾನಿ ಮೋದಿಯವರು ಯಾವುದೇ ತಾರತಮ್ಯವಿಲ್ಲದೆ ಎಲ್ಲಾ ವರ್ಗದ ಜನರ ಬಗ್ಗೆ ಯೋಚಿಸುತ್ತಾರೆ.ಇಂದು ಸಮಾಜದ ಕೊನೆಯ ಸಾಲಿನಲ್ಲಿ ಕುಳಿತಿರುವ ವ್ಯಕ್ತಿಗೂ ಅಂತ್ಯೋದಯ ಪರಿಕಲ್ಪನೆಯಡಿ ಸೌಲಭ್ಯಗಳು ತಲುಪಿ ಮುಖ್ಯವಾಹಿನಿಯ ಭಾಗವಾಗುವುದು ಅತ್ಯಂತ ಅಗತ್ಯವಾಗಿದೆ ಮತ್ತು ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಕಲ್ಯಾಣ ಯೋಜನೆಗಳ ಮೂಲಕ ಬಲವಾದ ಹೆಜ್ಜೆಯನ್ನು ಇಟ್ಟಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ .



