ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ನಾಯಕತ್ವ ಬದಲಾವಣೆಯ ಹೈಡ್ರಾಮಾ ತಾರಕಕ್ಕೇರಿರುವ ಬೆನ್ನಲ್ಲೇ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಾಂಗ್ರೆಸ್ ಸರ್ಕಾರದ ವಿರುದ್ಧ ಭಾರಿ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ನಂತರ ಕಾಂಗ್ರೆಸ್ನಿಂದ ಯಾರೇ ಮುಂದಿನ ಮುಖ್ಯಮಂತ್ರಿಯಾದರೂ ಅದು ಕೇವಲ ತಾತ್ಕಾಲಿಕ. ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಉಂಟಾಗುವ ಗೊಂದಲಗಳಿಂದಾಗಿ ಮಧ್ಯಂತರ ಚುನಾವಣೆ ಬರುವುದನ್ನು ಯಾರೂ ತಡೆಯಲು ಸಾಧ್ಯವಿಲ್ಲ ಎಂದು ಭವಿಷ್ಯ ನುಡಿದಿದ್ದಾರೆ.
ಸರ್ಕಾರದ ವೈಫಲ್ಯಕ್ಕೆ ಸಾಕ್ಷಿ:
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕಾಂಗ್ರೆಸ್ ಸರ್ಕಾರವು ಆಡಳಿತ ನಡೆಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂಬುದನ್ನು ಹೈಕಮಾಂಡ್ ಒಪ್ಪಿಕೊಂಡಂತಾಗಿದೆ. ಹಾಗಾಗಿ, ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಬದಲಾಯಿಸಲು ಹೈಕಮಾಂಡ್ ನಿರ್ಧಾರ ಮಾಡಿರುವುದು ಈ ಸರ್ಕಾರದ ಆಡಳಿತ ವೈಫಲ್ಯಕ್ಕೆ ನೇರ ಸಾಕ್ಷಿಯಾಗಿದೆ. ಕಾಂಗ್ರೆಸ್ನ ಆಂತರಿಕ ಕಚ್ಚಾಟದಿಂದಾಗಿ ರಾಜ್ಯದ ಆಡಳಿತ ಸಂಪೂರ್ಣ ಕುಸಿದಿದೆ ಎಂದು ಟೀಕಿಸಿದ್ದಾರೆ.
10 ಲಕ್ಷ ಕೋಟಿ ಸಾಲದ ಹೊರೆ
ಇನ್ನು, ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ರಾಜ್ಯವನ್ನು ಸಾಲದ ಕೂಪಕ್ಕೆ ದೂಡಿದೆ. ಇವತ್ತಿನವರೆಗೆ ರಾಜ್ಯದ ಮೇಲೆ ಬರೋಬ್ಬರಿ 10 ಲಕ್ಷ ಕೋಟಿ ರೂ. ಸಾಲದ ಹೊರೆ ಹೊರಿಸಲಾಗಿದೆ ಎಂದು ಹಣಕಾಸು ನಿರ್ವಹಣೆಯ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಸನ್ನದ್ಧವಾಗಿದೆ:
ರಾಜ್ಯದಲ್ಲಿ ಸೃಷ್ಟಿಯಾಗಿರುವ ರಾಜಕೀಯ ಅಸ್ಥಿರತೆಯಿಂದಾಗಿ ನಾವು ಜನರ ಮುಂದೆ ಹೋಗಲು ಸಿದ್ಧರಾಗಬೇಕಿದೆ. ಶೀಘ್ರದಲ್ಲೇ ಮಧ್ಯಂತರ ಚುನಾವಣೆ ಎದುರಾಗಲಿದ್ದು, ಬಿಜೆಪಿ ಅದಕ್ಕೆ ಸಂಪೂರ್ಣ ಸಜ್ಜಾಗಿದೆ ಎಂದು ಹೇಳಿದ್ದಾರೆ.



