ಹೊಸ ದಿಗಂತ ವರದಿ, ಭಟ್ಕಳ:
ಮುಂದಿನ ಎರಡು ವರ್ಷಗಳ ಕಾಂಗ್ರೆಸ್ ಆಡಳಿತದಲ್ಲಿ ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿ ಮೀರಿ ಹೆಚ್ಚಾಗಲಿದ್ದು,, ರಾಜ್ಯ ಕಾಂಗ್ರೆಸ್ ಹೈಕಮಾಂಡ್ ಗೆ ಎಟಿಎಂ ಯಂತ್ರ ಆಗಲಿದೆ ಎಂದು ರಾಜ್ಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿದರು.
ಒತ್ತಡಕ್ಕೆ ಮಣಿದು ರಾಜೀನಾಮೆ
ಭಟ್ಕಳದಲ್ಲಿ ಮೂರಿನಕಟ್ಟೆ ಪ್ರತಿಭಟನೆಯಲ್ಲಿ ಪಾಲ್ಗೊಂಡು ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಹುದ್ದೆಯನ್ನು ಸಿದ್ದರಾಮಯ್ಯ ಬಿಟ್ಟುಕೊಟ್ಟಿಲ್ಲ ಡಿ.ಕೆ.ಶಿವಕುಮಾರ್ ಅವರು ಅದನ್ನು ಕಿತ್ತುಕೊಂಡಿದ್ದಾರೆ. ಒತ್ತಡಕ್ಕೆ ಮಣಿದು ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಅವರಿಗೆ ಸ್ವಲ್ಪವೂ ಕಾಲಾವಕಾಶ ನೀಡದೆ ರಾಜಿನಾಮೆ ಪಡೆದಿದೆ ಎಂದರೆ ಕಾಂಗ್ರೆಸ್ ಹೈಕಮಾಂಡ್ ಕಣ್ಣಿಟ್ಟ ಎಟಿಎಂಗೆ ಡಿ.ಕೆ.ಶಿವಕುಮಾರ್ ಮುಖ್ಯಸ್ಥರಾಗಲಿದ್ದಾರೆ ಎಂದು ವ್ಯಂಗ್ಯವಾಡಿದರು.
ಭ್ರಷ್ಟಾಚಾರ ಮತ್ತಷ್ಟು ಹೆಚ್ಚಳ
ಸಿದ್ದರಾಮಯ್ಯ ಅವರ ಅವಧಿಯಲ್ಲಿದ್ದ ಭ್ರಷ್ಟಾಚಾರ ಈಗ ಇನ್ನಷ್ಟು ಹೆಚ್ಚಲಿದ್ದು, ರಾಜ್ಯದ ಜನತೆಯ ಸಮಸ್ಯೆ ಹೆಚ್ಚಲಿದೆ ಎಂದ ಅವರು, ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ ಇಬ್ಬರೂ ಒಂದೇ ಮನಸ್ಥಿತಿಯವರಾಗಿದ್ದು, ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟಕ್ಕೆ ಯತ್ನಿಸಿದ ಉಗ್ರನನ್ನು ಬ್ರದರ್ ಎಂದು ಕರೆದ ಡಿಕೆಶಿ ಮುಖ್ಯಮಂತ್ರಿಯಾದರೆ ಯಾವ ಪರಿಸ್ಥಿತಿ ಇರಲಿದೆ ಎನ್ನುವುದನ್ನು ಯೋಚಿಸಬೇಕಿದೆ ಎಂದು ಹೇಳಿದರು.
ಸಂಪದ ವಿಶ್ವೇಶ್ವರ ಹೆಗಡೆ ಕಾಗೇರಿ, ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ, ಮಾಜಿ ಶಾಸಕ ಸುನೀಲ ನಾಯ್ಕ ಮತ್ತಿತರರು ಉಪಸ್ಥಿತರಿದ್ದರು.



