ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ನೂತನ ಮುಖ್ಯಮಂತ್ರಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಕೊನೆಗೂ ದಿನಾಂಕ ಮತ್ತು ಸ್ಥಳ ನಿಗದಿಯಾಗಿದೆ. ಬರುವ ಜೂನ್ 3 ರಂದು ಲೋಕಭವನದ ಗ್ಲಾಸ್ ಹೌಸ್ನಲ್ಲಿ ಈ ಭವ್ಯ ಕಾರ್ಯಕ್ರಮ ನಡೆಯಲಿದೆ ಎಂದು ಕಾಂಗ್ರೆಸ್ ರಾಜ್ಯ ಘಟಕದ ಕಾರ್ಯಾಧ್ಯಕ್ಷರಾದ ಜಿ. ಸಿ. ಚಂದ್ರಶೇಖರ್ ಅವರು ಅಧಿಕೃತವಾಗಿ ಪ್ರಕಟಿಸಿದ್ದಾರೆ.
ಲೋಕಭವನದ ಗ್ಲಾಸ್ ಹೌಸ್ನಲ್ಲಿ ಪದಗ್ರಹಣ
ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಿ.ಸಿ. ಚಂದ್ರಶೇಖರ್ ಅವರು, ಆರಂಭದಲ್ಲಿ ಕಾರ್ಯಕ್ರಮದ ವೇದಿಕೆ ಕುರಿತು ಸಾಕಷ್ಟು ಗೊಂದಲಗಳಿದ್ದವು. ಒಂದು ಹಂತದಲ್ಲಿ ರಾಜಭವನದಲ್ಲೇ ಕಾರ್ಯಕ್ರಮ ನಡೆಸಲು ಯೋಚಿಸಲಾಗಿತ್ತು. ಆದರೆ, ಅಂತಿಮವಾಗಿ ಜೂನ್ 3 ರಂದು ಲೋಕಭವನದ ಗ್ಲಾಸ್ ಹೌಸ್ನಲ್ಲಿ ಕಾರ್ಯಕ್ರಮ ಆಯೋಜಿಸಲು ತೀರ್ಮಾನಿಸಲಾಗಿದೆ. ಪ್ರಮಾಣ ವಚನ ಸ್ವೀಕಾರದ ನಿಖರವಾದ ಸಮಯ ಇಂದು ಸಂಜೆಯೊಳಗೆ ಅಂತಿಮಗೊಂಡು ಹೊರಬೀಳಲಿದೆ ಎಂದು ತಿಳಿಸಿದರು.
ಅದ್ದೂರಿತನಕ್ಕೆ ಬ್ರೇಕ್; ಸರಳತೆಗೆ ಆದ್ಯತೆ
ಮೊದಲಿಗೆ ರಾಜ್ಯದ ಮೂಲೆ ಮೂಲೆಗಳಿಂದ ಲಕ್ಷಾಂತರ ಜನರನ್ನು ಬೆಂಗಳೂರಿಗೆ ಕರೆತರಲು ಯೋಜನೆ ರೂಪಿಸಲಾಗಿತ್ತು. ಇದಕ್ಕಾಗಿ ಸುಮಾರು 10,000 ದಿಂದ 15,000 ವಿಶೇಷ ಬಸ್ಗಳನ್ನು ಕಾಯ್ದಿರಿಸುವ ಬಗ್ಗೆಯೂ ಗಂಭೀರ ಚರ್ಚೆಗಳು ನಡೆದಿದ್ದವು. ಆದರೆ ಪ್ರಸ್ತುತ ಎದುರಾಗಿರುವ ಇಂಧನ ಬಿಕ್ಕಟ್ಟು ಮತ್ತು ರಾಜಧಾನಿ ಬೆಂಗಳೂರಿನ ಟ್ರಾಫಿಕ್ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರವನ್ನು ಕೈಬಿಡಲಾಗಿದೆ.
“ಅಧಿಕಾರ ಸ್ವೀಕಾರ ಸಮಾರಂಭವು ಯಾವುದೇ ವೈಭವದ ಪ್ರದರ್ಶನವಾಗಬಾರದು. ಅದು ನಮ್ಮ ಕೆಲಸ ಮತ್ತು ಜನಸೇವೆಯ ಮನೋಭಾವವನ್ನು ಬಿಂಬಿಸುವಂತಿರಬೇಕು. ಹಾಗಾಗಿ ಸಾಧ್ಯವಾದಷ್ಟು ಸರಳವಾಗಿ ಕಾರ್ಯಕ್ರಮ ನಡೆಸಲು ಪಕ್ಷ ನಿರ್ದೇಶನ ನೀಡಿದೆ” ಎಂದು ಚಂದ್ರಶೇಖರ್ ಸ್ಪಷ್ಟಪಡಿಸಿದರು.
ಸಾರ್ವಜನಿಕರಲ್ಲಿ ವಿಶೇಷ ಮನವಿ
ಮುಖ್ಯಮಂತ್ರಿಗಳ ಪದಗ್ರಹಣ ಸಮಾರಂಭದಿಂದಾಗಿ ಸಾರ್ವಜನಿಕರಿಗೆ ಯಾವುದೇ ರೀತಿಯ ಸಂಚಾರ ದಟ್ಟಣೆಯ ಕಿರಿಕಿರಿ ಉಂಟಾಗಬಾರದು ಎಂಬುದು ಪಕ್ಷದ ಉದ್ದೇಶವಾಗಿದೆ. ಹೀಗಾಗಿ, ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳು ಕಾರ್ಯಕ್ರಮದ ಸ್ಥಳಕ್ಕೆ ಸಾಮೂಹಿಕವಾಗಿ ಧಾವಿಸದೆ, ಸಹಕರಿಸಬೇಕು ಎಂದು ಕಾಂಗ್ರೆಸ್ ಕಾರ್ಯಾಧ್ಯಕ್ಷರು ಮನವಿ ಮಾಡಿಕೊಂಡಿದ್ದಾರೆ.



