ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನೇತೃತ್ವದ ಸಚಿವ ಸಂಪುಟವು ಎರಡು ಲಕ್ಷ ರೂಪಾಯಿವರೆಗಿನ ಕೃಷಿ ಸಾಲ ಮನ್ನಾ ಯೋಜನೆಗೆ ಇಂದು ಅನುಮೋದನೆ ನೀಡಿದೆ. ಈ ಮೂಲಕ ರಾಜ್ಯದ ಸುಮಾರು 56 ಲಕ್ಷ ರೈತರಿಗೆ ವರದಾನವಾಗಲಿದೆ.
56 ಲಕ್ಷ ರೈತರ ಸಾಲ ಮನ್ನಾ
ಇಂದು ಸಿಎಂ ದೇವೇಂದ್ರ ಫಡ್ನವೀಸ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸುಮಾರು 56 ಲಕ್ಷ ರೈತರ 36,585 ಕೋಟಿ ರೂ. ಸಾಲ ಮನ್ನಾ ಮಾಡಲು ನಿರ್ಧರಿಸಲಾಗಿದೆ. ಇದರ ಜೊತೆಗೆ ರೈತರು ತಮ್ಮ ಬೆಳೆ ಸಾಲವನ್ನು ನಿಯಮಿತವಾಗಿ ಮರುಪಾವತಿಸಿದರೆ 50 ಸಾವಿರ ರೂ.ಗಳವರೆಗೆ ಪ್ರೋತ್ಸಾಹಧನ ನೀಡಲು ನಿರ್ಧರಿಸಲಾಗಿದೆ.
ಚುನಾವಣೆಗೂ ಮುನ್ನ ಕೊಟ್ಟ ಭರವಸೆ
2024ರ ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟವು ರೈತರಿಗೆ ಕೃಷಿ ಸಾಲ ಮನ್ನಾ ಮಾಡುವುದಾಗಿ ಭರವಸೆಯನ್ನು ನೀಡಿತ್ತು. ಅದರಂತೆ ಸರಕಾರ ರಚನೆಯಾದ ಬಳಿಕ ಸಿಎಂ ಫಡ್ನವೀಸ್, 2026ರ ಜೂನ್ 30ರೊಳಗೆ ರೈತರ ಸಂಪೂರ್ಣ ಕೃಷಿ ಸಾಲ ಮನ್ನಾ ವಿಷಯದ ಬಗ್ಗೆ ರಾಜ್ಯ ಸರ್ಕಾರ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ತಿಳಿಸಿದ್ದರು. ಅದರಂತೆ ಇಂದು ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಯಿತು. ಈ ಮೂಲಕ ರೈತರಿಗೆ ಕೊಟ್ಟ ಭರವಸೆಯನ್ನು ಈಡೇರಿಸಿದ್ದಾರೆ.



