ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ಶಿವಸೇನೆ ಮಾದರಿಯಲ್ಲಿಯೇ ಇದೀಗ ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲೂ ಭಿನ್ನಮತ ಸ್ಫೋಟಗೊಂಡಿದ್ದು, ಪಕ್ಷ ವಿಭಜನೆಯತ್ತ ಸಾಗುತ್ತಿರುವ ಮುನ್ಸೂಚನೆ ಸಿಕ್ಕಿದೆ. ಟಿಎಂಸಿಯ ಸುಮಾರು 20 ಸಂಸದರು ಭಾರತೀಯ ಜನತಾ ಪಾರ್ಟಿ ನಾಯಕರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಶೀಘ್ರದಲ್ಲೇ ಪಕ್ಷ ತೊರೆಯಲಿದ್ದಾರೆ ಎಂಬ ವರದಿಗಳು ಬಂಗಾಳ ರಾಜಕಾರಣದಲ್ಲಿ ತಲ್ಲಣ ಸೃಷ್ಟಿಸಿವೆ.
ಮೂಲಗಳ ಪ್ರಕಾರ, ಟಿಎಂಸಿಯ ಒಟ್ಟು 41 ಸಂಸದರ ಪೈಕಿ ಅರ್ಧದಷ್ಟು ಅಂದರೆ 20 ಜನ ಸಂಸದರು ಮಮತಾ ಬ್ಯಾನರ್ಜಿ ನೇತೃತ್ವದ ಪಕ್ಷವನ್ನು ತೊರೆದು ಕಮಲ ಪಾಳಯ ಸೇರಲು ನಿರ್ಧರಿಸಿದ್ದಾರೆ. ಒಂದು ವೇಳೆ ಇಷ್ಟು ದೊಡ್ಡ ಮಟ್ಟದ ಸಂಸದರು ಬಂಡಾಯವೆದ್ದು ಹೊರಬಂದರೆ, ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷ ಇಬ್ಭಾಗವಾಗುವುದು ಬಹುತೇಕ ಖಚಿತ ಎನ್ನಲಾಗಿದೆ.
ಇತ್ತೀಚಿನ ಚುನಾವಣೆಯಲ್ಲಿ ಬಿಜೆಪಿಯ ಎದುರು ತೃಣಮೂಲ ಕಾಂಗ್ರೆಸ್ ತೀವ್ರ ಹಿನ್ನಡೆ ಅನುಭವಿಸಿತ್ತು. ಈ ಹೀನಾಯ ಸೋಲಿನ ಬೆನ್ನಲ್ಲೇ ಪಕ್ಷದ ಶಾಸಕರು ಮತ್ತು ಸಂಸದರು ಸಾಮೂಹಿಕವಾಗಿ ಪಕ್ಷ ತೊರೆಯಲು ಮುಂದಾಗಿರುವುದು ದೀದಿ ಪಾಳಯದಲ್ಲಿ ತೀವ್ರ ಆತಂಕ ಮೂಡಿಸಿದೆ. ಸಂಸದರ ಈ ಬಂಡಾಯ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ರಾಜಕೀಯ ಭವಿಷ್ಯಕ್ಕೆ ದೊಡ್ಡ ಹೊಡೆತ ನೀಡುವ ಸಾಧ್ಯತೆಯಿದೆ.



