ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯಕ್ಕೆ ಸೇವೆ ಸಲ್ಲಿಸಿರುವ ಹಿರಿಯ ನಾಯಕರ ಅನುಭವ ಮತ್ತು ಮಾರ್ಗದರ್ಶನವನ್ನು ಪಡೆದುಕೊಳ್ಳಲಿದ್ದೇನೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿಗಳಾದ ವೀರಪ್ಪ ಮೊಯ್ಲಿ, ಜಗದೀಶ್ ಶೆಟ್ಟರ್ ಹಾಗೂ ಡಿ.ವಿ. ಸದಾನಂದ ಗೌಡ ಅವರ ನಿವಾಸಗಳಿಗೆ ಭೇಟಿ ನೀಡಿ ಸಮಾಲೋಚನೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಅಭಿವೃದ್ಧಿಗೆ ಹಿರಿಯರ ಸಲಹೆ ಮತ್ತು ಅನುಭವ ಅಗತ್ಯ ಎಂದು ಹೇಳಿದರು.
ತಾವು ವೀರಪ್ಪ ಮೊಯ್ಲಿ ಅವರನ್ನು ಮಾತ್ರವಲ್ಲದೆ ಜಗದೀಶ್ ಶೆಟ್ಟರ್, ಡಿ.ವಿ. ಸದಾನಂದ ಗೌಡ ಹಾಗೂ ಬಸವರಾಜ ಬೊಮ್ಮಾಯಿ ಅವರನ್ನೂ ಭೇಟಿ ಮಾಡಿದ್ದು, ಸಮಯ ದೊರೆತರೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನೂ ಭೇಟಿ ಮಾಡುವುದಾಗಿ ತಿಳಿಸಿದರು.
ಇದನ್ನೂ ಓದಿ:
ರಾಜ್ಯಕ್ಕೆ ಸೇವೆ ಸಲ್ಲಿಸಿರುವ ಎಲ್ಲ ನಾಯಕರಿಗೂ ಸಲ್ಲಬೇಕಾದ ಗೌರವವನ್ನು ನೀಡುವುದು ತಮ್ಮ ಜವಾಬ್ದಾರಿ ಎಂದು ಹೇಳಿದ ಮುಖ್ಯಮಂತ್ರಿ, ಈ ನಾಯಕರು ರಾಜ್ಯದ ಹಿತಕ್ಕಾಗಿ ಕೆಲಸ ಮಾಡಿದ್ದು, ಜನಪರ ನಿರ್ಧಾರಗಳನ್ನು ಕೈಗೊಂಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಡಿ.ವಿ. ಸದಾನಂದ ಗೌಡ ಅವರು ‘ಸಕಾಲ’ ಯೋಜನೆಯನ್ನು ಜಾರಿಗೆ ತಂದಿರುವುದನ್ನು ಉಲ್ಲೇಖಿಸಿದ ಅವರು, ತಮ್ಮಗಿಂತ ಹಿರಿಯರಾದ ಈ ನಾಯಕರ ಮಾರ್ಗದರ್ಶನ ಅಗತ್ಯವಾಗಿದೆ ಎಂದರು.
ಪಕ್ಷ ಮತ್ತು ಸೈದ್ಧಾಂತಿಕ ಭಿನ್ನಾಭಿಪ್ರಾಯಗಳು ಬೇರೆ ವಿಷಯವಾಗಿದ್ದರೂ, ರಾಜ್ಯದ ಹಿತಾಸಕ್ತಿಯ ವಿಚಾರದಲ್ಲಿ ಹಿರಿಯರ ಅನುಭವವನ್ನು ಗೌರವಿಸುವುದು ಮುಖ್ಯ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.



