ಹೊಸದಿಗಂತ ವರದಿ ಚಿತ್ರದುರ್ಗ:
ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಬಾಕಿ ಇರುವ ದಂಡವನ್ನು ಶೇ.50 ರಿಯಾಯಿತಿಯೊಂದಿಗೆ ಪಾವತಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಸಾರ್ವಜನಿಕರಿಗೆ ವಿಶೇಷ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಡಿ.ಜೆ. ಸುದೀನ್ ಕುಮಾರ್ ತಿಳಿಸಿದ್ದಾರೆ.
ಜೂನ್ 21ರಿಂದ ವಿಶೇಷ ಅವಕಾಶ
ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂನ್ 21ರಿಂದ ಜುಲೈ 10ರವರೆಗೆ ಈ ಸೌಲಭ್ಯ ಲಭ್ಯವಿರಲಿದೆ ಎಂದು ಹೇಳಿದರು. ಮೇ 2026ಕ್ಕೂ ಮೊದಲು ಪೊಲೀಸ್ ಇಲಾಖೆಯ ಇ-ಚಲನ್ಗಳಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳು ಹಾಗೂ ಸಾರಿಗೆ ಇಲಾಖೆಯಲ್ಲಿ 1991ರಿಂದ 2022ರವರೆಗೆ ದಾಖಲಾಗಿರುವ ಪ್ರಕರಣಗಳಿಗೆ ಈ ರಿಯಾಯಿತಿ ಅನ್ವಯವಾಗಲಿದೆ.
ಇದನ್ನೂ ಓದಿ:
ಪ್ರತಿ ಠಾಣೆಯಲ್ಲಿ ವಿಶೇಷ ಬೂತ್
ರಿಯಾಯಿತಿ ದಂಡ ಸಂಗ್ರಹ ಪ್ರಕ್ರಿಯೆಯನ್ನು ಸುಗಮಗೊಳಿಸಲು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ವಿಶೇಷ ಬೂತ್ಗಳನ್ನು ತೆರೆಯಲಾಗುತ್ತದೆ. ಠಾಣಾಧಿಕಾರಿಗಳ ನೇತೃತ್ವದಲ್ಲಿ ಸಾರ್ವಜನಿಕರಿಗೆ ದಂಡ ಪಾವತಿ ಮತ್ತು ಪ್ರಕರಣಗಳ ಇತ್ಯರ್ಥಕ್ಕೆ ನೆರವು ನೀಡಲಾಗುತ್ತದೆ.
ಸಂಚಾರ ನಿಯಮ ಪಾಲನೆಗೆ ಮನವಿ
ದಂಡದ ರಿಯಾಯಿತಿ ನೀಡುವುದು ಕೇವಲ ಪ್ರಕರಣಗಳ ವಿಲೇವಾರಿಗೆ ಮಾತ್ರವಲ್ಲ, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶವೂ ಹೊಂದಿದೆ. ಸಂಚಾರ ನಿಯಮಗಳನ್ನು ಪಾಲಿಸುವುದರಿಂದ ಜೀವ ಹಾಗೂ ಕುಟುಂಬದ ಸುರಕ್ಷತೆ ಕಾಪಾಡಬಹುದು ಎಂದು ಅವರು ಹೇಳಿದರು.
ಇದೇ ವೇಳೆ ಪರಿಸರ ಸಂರಕ್ಷಣೆ, ಕೆರೆಗಳ ಪುನರುಜ್ಜೀವನ ಮತ್ತು ಅರಣ್ಯ ಅಭಿವೃದ್ಧಿಗೆ ಸಂಬಂಧಿಸಿದ ಮಾಹಿತಿಯನ್ನು ಸಾರ್ವಜನಿಕರು ನೀಡಿದರೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು.



