June 12, 2026
Friday, June 12, 2026
spot_img

ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾದ ಸಿಎಂ ಡಿ.ಕೆ. ಶಿವಕುಮಾರ್: ರಾಜ್ಯದ ಭದ್ರತೆಗೆ 360 ಕೋಟಿ ನೆರವು ಕೋರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅನ್ನು ಭೇಟಿಯಾಗಿ ರಾಜ್ಯದ ಕಾನೂನು ಸುವ್ಯವಸ್ಥೆ ಮತ್ತು ಭದ್ರತೆಗೆ ಸಂಬಂಧಿಸಿದಂತೆ ಮಹತ್ವದ ಮಾತುಕತೆ ನಡೆಸಿದರು. ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ದೆಹಲಿ ಪ್ರವಾಸ ಕೈಗೊಂಡಿರುವ ಸಿಎಂ, ರಾಜ್ಯದ ಪೊಲೀಸ್ ಇಲಾಖೆಯ ಆಧುನೀಕರಣಕ್ಕೆ ಕೇಂದ್ರದ ಸಹಕಾರ ಕೋರಿದ್ದಾರೆ.

ಸೈಬರ್ ಕ್ರೈಮ್ ತಡೆಗೆ K4C ಪ್ರಸ್ತಾವನೆ:
ರಾಜ್ಯದಲ್ಲಿ ಹೆಚ್ಚುತ್ತಿರುವ ಆನ್‌ಲೈನ್ ವಂಚನೆ ಹಾಗೂ ಸೈಬರ್ ಅಪರಾಧಗಳನ್ನು ತಡೆಯಲು ಅಂದಾಜು 360 ಕೋಟಿ ವೆಚ್ಚದಲ್ಲಿ ‘ಕರ್ನಾಟಕ ಸೈಬರ್ ಕ್ರೈಮ್ ಕಂಟ್ರೋಲ್ ಅಂಡ್ ಕೋಆರ್ಡಿನೇಷನ್ ಯುನಿಟ್’ (K4C) ಸ್ಥಾಪಿಸಲು ಉದ್ದೇಶಿಸಲಾಗಿದ್ದು, ಇದಕ್ಕೆ ಶೀಘ್ರ ಅನುಮೋದನೆ ನೀಡುವಂತೆ ಕೇಂದ್ರ ಗೃಹ ಸಚಿವರಿಗೆ ಸಿಎಂ ಮನವಿ ಮಾಡಿದರು. ಇದರೊಂದಿಗೆ ವಿಜಯನಗರ ಮತ್ತು ರಾಮನಗರದಲ್ಲಿ ಹೆಚ್ಚುವರಿ ಐಆರ್‌ಬಿ ಬೆಟಾಲಿಯನ್‌ಗಳನ್ನು ಸ್ಥಾಪಿಸಲು 243.87 ಕೋಟಿ ಅನುದಾನ ಬಿಡುಗಡೆ ಮಾಡುವಂತೆಯೂ ಪ್ರಸ್ತಾವನೆ ಸಲ್ಲಿಸಲಾಗಿದೆ.

ಸಕಾರಾತ್ಮಕ ಸ್ಪಂದನೆ ನೀಡಿದ ಅಮಿತ್ ಶಾ:
ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ನಡೆದ ಈ ಸಭೆಯಲ್ಲಿ, ಸುಪ್ರೀಂ ಕೋರ್ಟ್ ಮಾರ್ಗಸೂಚಿ ಅನ್ವಯ ರಾಜ್ಯದ ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಮೇಲ್ದರ್ಜೆಗೆ ಏರಿಸಲು ಹಾಗೂ ಕಾರಾಗೃಹಗಳ ಆಧುನೀಕರಣಕ್ಕೆ ಬೆಂಬಲ ನೀಡುವಂತೆ ಕೋರಲಾಯಿತು. ರಾಜ್ಯದ ಪ್ರಸ್ತಾವನೆಗಳನ್ನು ಸೂಕ್ಷ್ಮವಾಗಿ ಆಲಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ದೇಶದ ಭದ್ರತೆ ಮತ್ತು ಕಾನೂನು ಸುವ್ಯವಸ್ಥೆ ವಿಷಯದಲ್ಲಿ ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ಸಂಪೂರ್ಣ ಸಹಕಾರ ನೀಡಲಿದೆ ಎಂದು ಭರವಸೆ ನೀಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !