ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳದ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸುವ ಬೆಳವಣಿಗೆಯೊಂದರಲ್ಲಿ, ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರ ಕೋಲ್ಕತ್ತಾದ ನಿವಾಸದಲ್ಲಿ ಪೊಲೀಸರು ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಕೋಲ್ಕತ್ತಾ ಹಾಗೂ ಪಶ್ಚಿಮ ಮೇದಿನಿಪುರ ಪೊಲೀಸರ ಜಂಟಿ ತಂಡ ಕೇಂದ್ರ ಪಡೆಗಳ ಸಹಕಾರದೊಂದಿಗೆ ಈ ಕಾರ್ಯಾಚರಣೆ ನಡೆಸಿದೆ.
ನಾಲ್ಕು ಗಂಟೆಗಳ ಕಾಲ ಶೋಧ
ಶನಿವಾರ ಮುಂಜಾನೆ ಆರಂಭವಾದ ಕಾರ್ಯಾಚರಣೆ ನಾಲ್ಕು ಗಂಟೆಗಳಿಗೂ ಹೆಚ್ಚು ಕಾಲ ಮುಂದುವರಿದಿದೆ. ನಿವಾಸದ ಸುತ್ತಮುತ್ತ ಭಾರೀ ಭದ್ರತೆ ನಿಯೋಜಿಸಲಾಗಿದ್ದು, ಸ್ಥಳೀಯ ಪೊಲೀಸ್ ಸಿಬ್ಬಂದಿಯೂ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಟಿಎಂಸಿ ಆರೋಪವೇನು?
ಪೊಲೀಸರು ಮನೆಗೆ ಪ್ರವೇಶಿಸಲು ಬಾಗಿಲು ಬಡಿದರೂ ಪ್ರತಿಕ್ರಿಯೆ ಸಿಗದ ಹಿನ್ನೆಲೆಯಲ್ಲಿ ಬೀಗ ಒಡೆದು ಒಳನುಗ್ಗಿದ್ದಾರೆ ಎಂದು ಟಿಎಂಸಿ ನಾಯಕರು ಆರೋಪಿಸಿದ್ದಾರೆ. ಅಭಿಷೇಕ್ ಬ್ಯಾನರ್ಜಿ ಕೂಡ ಶೋಧ ಕಾರ್ಯದ ವೇಳೆ ಬಲವಂತವಾಗಿ ಮನೆ ಪ್ರವೇಶಿಸಲಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:
ಮಮತಾ ಬ್ಯಾನರ್ಜಿ ನಿವಾಸಕ್ಕೆ ಭೇಟಿ
ಕಾರ್ಯಾಚರಣೆಯ ಮಾಹಿತಿ ತಿಳಿದ ತಕ್ಷಣ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅಭಿಷೇಕ್ ನಿವಾಸಕ್ಕೆ ಭೇಟಿ ನೀಡಿ ಪರಿಸ್ಥಿತಿಯ ಕುರಿತು ಮಾಹಿತಿ ಪಡೆದಿದ್ದಾರೆ.
ಆರ್ಥಿಕ ವಂಚನೆ ಪ್ರಕರಣದ ತನಿಖೆ
ಪಶ್ಚಿಮ ಮೇದಿನಿಪುರ ಜಿಲ್ಲೆಯ ಸಲ್ಬೋನಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಆರ್ಥಿಕ ಅಕ್ರಮ ಪ್ರಕರಣದ ತನಿಖೆಯ ಭಾಗವಾಗಿ ಈ ಶೋಧ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಪ್ರಕರಣದ ವಿವರಗಳು ಮತ್ತು ವಶಪಡಿಸಿಕೊಳ್ಳಲಾದ ದಾಖಲೆಗಳ ಕುರಿತು ಇನ್ನೂ ಅಧಿಕೃತ ಮಾಹಿತಿ ಬಹಿರಂಗವಾಗಿಲ್ಲ.



