ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಶರ್ ಲಾರಿಯಲ್ಲಿ ಅಮಾನುಷವಾಗಿ ಹಾಗೂ ಹಿಂಸಾತ್ಮಕವಾಗಿ ಜಾನುವಾರು ಸಾಗಾಟ ನಡೆಸುತ್ತಿದ್ದ ಕೃತ್ಯವನ್ನು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಬಳಿ ಬಜರಂಗದಳದ ಕಾರ್ಯಕರ್ತರು ಪತ್ತೆ ಹಚ್ಚಿ ನೀಡಿದ ಮಾಹಿತಿಯಂತೆ ಪೊಲೀಸರು ತುರ್ತು ಕಾರ್ಯಾಚರಣೆ ನಡೆಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.
ಘಟನೆ ಇಂದು ಬೆಳಗ್ಗೆ ನಡೆದಿದೆ. ಒಟ್ಟು 16 ಜಾನುವಾರುಗಳನ್ನು ಐಶರ್ ವಾಹನದಲ್ಲಿ ಸಾಗಾಟ ನಡೆಸಲಾಗುತ್ತಿತ್ತು.
ಹಾಸನ ಕಡೆಯಿಂದ ಮಂಗಳೂರಿನತ್ತ ಸಂಚರಿಸುತ್ತಿದ್ದ ಈ ಲಾರಿಯನ್ನು ಗಮನಿಸಿದ ಬಜರಂಗ ದಳದ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿದ್ದು ನೆಕ್ಕಿಲಾಡಿಯಲ್ಲಿ ಗಸ್ತು ನಿರತ ಪೊಲೀಸರು ಲಾರಿಯನ್ನು ಅಡ್ಡಗಟ್ಟಿ ತಪಾಸಣೆಗೆ ಒಳಪಡಿಸಿದಾಗ ಇದರಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟದ ಕೃತ್ಯ ಪತ್ತೆಯಾಗಿದೆ.
ಪೊಲೀಸ್ ಕಾರ್ಯಾಚರಣೆ ವೇಳೆ ಓರ್ವ ಪರಾರಿಯಾಗಿದ್ದು, ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.



