ಹೊಸದಿಗಂತ ವರದಿ ಬೆಳಗಾವಿ :
ಜೂನ್ 22ರಂದು ಬೆಳಗಾವಿಯಲ್ಲಿ ಕನ್ನಡ ಕಡ್ಡಾಯದ ವಿರುದ್ಧ ಎಂಇಎಸ್ ನಾಯಕರು ನಡೆಸಲು ಉದ್ದೇಶಿಸಿರುವ ಪ್ರತಿಭಟನೆಗೆ ಯಾವುದೇ ಕಾರಣಕ್ಕೂ ಅನುಮತಿ ನೀಡಬಾರದೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕನ್ನಡಪರ ಸಂಘಟನೆಗಳ ಒಕ್ಕೂಟ) ಜಿಲ್ಲಾ ಘಟಕದ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಗುರುವಾರ ಕರವೇ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟಿಸಿ, ಕಳೆದ ಹಲವು ದಶಕಗಳಿಂದ ಗಡಿಭಾಗದಲ್ಲಿ ಭಾಷಾ ಆಧಾರಿತ ರಾಜಕಾರಣ ನಡೆಸುತ್ತಾ ಬಂದಿರುವ ಎಂಇಎಸ್ ನಾಯಕರು ಮತ್ತೆ ಬೆಳಗಾವಿಯಲ್ಲಿ ಚಟುವಟಿಕೆಗಳನ್ನು ಆರಂಭಿಸಿದ್ದು, ಇದರಿಂದ ಶಾಂತಿ-ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಇದೆ ಎಂದು ಅಸಮಾಧಾನ ಹೊರ ಹಾಕಿದರು.
ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗವಾಗಿದ್ದು, ಕನ್ನಡ ಭಾಷೆ, ನೆಲ, ಜಲ ಹಾಗೂ ಸಂಸ್ಕೃತಿಗೆ ಗೌರವ ನೀಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಇಂತಹ ಸಂದರ್ಭದಲ್ಲಿ ಕನ್ನಡ ಕಡ್ಡಾಯದ ವಿರುದ್ಧ ಪ್ರತಿಭಟನೆ ನಡೆಸಲು ಮುಂದಾಗಿರುವ ಎಂಇಎಸ್ ನಾಯಕರನ್ನು ಮುಂಜಾಗ್ರತಾ ಕ್ರಮವಾಗಿ ಬಂಧಿಸಬೇಕು ಹಾಗೂ ಅವರ ಪ್ರತಿಭಟನೆಗೆ ಅನುಮತಿ ನಿರಾಕರಿಸಬೇಕು ಎಂದು ಮನವಿಯಲ್ಲಿ ಒತ್ತಾಯಿದರು.
ಇದನ್ನೂ ಓದಿ:
ರಾಜಕೀಯ ಒತ್ತಡಗಳಿಗೆ ಮಣಿದು ಜಿಲ್ಲಾಡಳಿತ ಎಂಇಎಸ್ ಪ್ರತಿಭಟನೆಗೆ ಅನುಮತಿ ನೀಡಿದಲ್ಲಿ, ಅದಕ್ಕೆ ಪ್ರತಿಯಾಗಿ ಜೂನ್ 22ರಂದು “ಕನ್ನಡವೇ ಸಾರ್ವಭೌಮ” ಎಂಬ ಘೋಷಣೆಯೊಂದಿಗೆ ಕನ್ನಡ ಸ್ವಾಭಿಮಾನಿ ರ್ಯಾಲಿಯನ್ನು ಬೆಳಗಾವಿಯಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಕರವೇ ಜಿಲ್ಲಾಧ್ಯಕ್ಷ ದೀಪಕ್ ಗುಡಗನಟ್ಟಿನ ಅವರ ನೇತ್ರತ್ವದಲ್ಲಿ ಎಚ್ಚರಿಕೆ ನೀಡಿದೆ.
ಈ ರ್ಯಾ ಲಿಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಕನ್ನಡಪರ ಕಾರ್ಯಕರ್ತರು, ಮುಖಂಡರುಗಳು, ಭಾಗವಹಿಸಲಿದ್ದಾರೆ ಕರವೇ ಜಿಲ್ಲಾ ಅಧ್ಯಕ್ಷ ದೀಪಕ್ ಗುಡಗನಟ್ಟಿ ಹೇಳಿದರು.
ಈ ವೇಳೆ ಕರವೇ ರಾಜ್ಯ ಸಂಚಾಲಕ ಸುರೇಶ್ ಗವನ್ನವರ, ಜಿಲ್ಲಾ ಅಧ್ಯಕ್ಷ ದೀಪಕ ಗುಡಗನಟ್ಟೆ, ಮಹಿಳಾ ಕಾರ್ಯಕರ್ತರು ಸೇರಿದಂತೆ ಹಲವರು ಕಾರ್ಯಕರ್ತುರು ಪಾಲ್ಗೊಂಡಿದ್ದರು.



