ಹೊಸದಿಗಂತ ಡಿಜಿಟಲ್ ಡೆಸ್ಕ್;
ರಾಜ್ಯದಲ್ಲಿ ಮಾವು ಬೆಲೆಯಲ್ಲಿ ಉಂಟಾಗಿರುವ ಭಾರಿ ಕುಸಿತದಿಂದ ಕಂಗಾಲಾಗಿರುವ ಕರ್ನಾಟಕದ ಮಾವು ಬೆಳೆಗಾರರ ನೆರವಿಗೆ ಧಾವಿಸುವಂತೆ ಕೋರಿ ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ, ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ಗೆ ತುರ್ತು ಪತ್ರ ಬರೆದಿದ್ದಾರೆ.
ಮಾರುಕಟ್ಟೆ ಹಸ್ತಕ್ಷೇಪಕ್ಕೆ ಮನವಿ:
ಪ್ರಸಕ್ತ ಋತುವಿನಲ್ಲಿ ಮಾವು ಇಳುವರಿ ಉತ್ತಮವಾಗಿದ್ದರೂ, ಮಾರುಕಟ್ಟೆಯಲ್ಲಿ ದಿಢೀರ್ ಬೆಲೆ ಕುಸಿತ ಉಂಟಾಗಿದೆ. ಇದರಿಂದಾಗಿ ಹೂಡಿಕೆ ಮಾಡಿದ ಬಂಡವಾಳವೂ ಸಿಗದೆ ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಕೃಷಿ ಸಚಿವಾಲಯವು ತಕ್ಷಣವೇ ಮಧ್ಯಪ್ರವೇಶಿಸಿ, ‘ಮಾರುಕಟ್ಟೆ ಹಸ್ತಕ್ಷೇಪ ಯೋಜನೆ’ ಅಡಿಯಲ್ಲಿ ಮಾವು ಖರೀದಿಸಲು ಕ್ರಮ ಕೈಗೊಳ್ಳಬೇಕು ಮತ್ತು ರೈತರಿಗೆ ಸೂಕ್ತ ಬೆಂಬಲ ಬೆಲೆ ಒದಗಿಸಬೇಕು ಎಂದು ಜೋಶಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.
ರೈತರ ಹಿತರಕ್ಷಣೆಗೆ ಒತ್ತು:
ಕರ್ನಾಟಕದ ಬಯಲು ಸೀಮೆ ಹಾಗೂ ಮಲೆನಾಡು ಭಾಗದ ಪ್ರಮುಖ ವಾಣಿಜ್ಯ ಬೆಳೆಯಾಗಿರುವ ಮಾವನ್ನು ನಂಬಿ ಲಕ್ಷಾಂತರ ರೈತ ಕುಟುಂಬಗಳು ಜೀವನ ಸಾಗಿಸುತ್ತಿವೆ. ಬೆಲೆ ಕುಸಿತ ತಡೆಯದಿದ್ದರೆ ರೈತರು ಸಾಲದ ಸುಳಿಗೆ ಸಿಲುಕುವ ಭೀತಿ ಎದುರಾಗಿದೆ. ಹೀಗಾಗಿ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರದೊಂದಿಗೆ ಸಮನ್ವಯ ಸಾಧಿಸಿ, ಶೀಘ್ರದಲ್ಲೇ ಖರೀದಿ ಕೇಂದ್ರಗಳನ್ನು ತೆರೆಯಲು ಅನುಮತಿ ನೀಡಬೇಕು ಎಂದು ಪತ್ರದ ಮೂಲಕ ಜೋಶಿ ಕೃಷಿ ಸಚಿವರ ಗಮನ ಸೆಳೆದಿದ್ದಾರೆ.



