ಹೊಸದಿಗಂತ ಬೆಳಗಾವಿ:
ಬೆಳಗಾವಿ ಜಿಲ್ಲೆಯಲ್ಲಿ ಲಿವಿಂಗ್ ರಿಲೇಷನ್ಶಿಪ್ನಲ್ಲಿದ್ದ ಯುವತಿಯನ್ನು ಅತ್ಯಂತ ಕ್ರೂರವಾಗಿ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದ ಗಂಗವ್ವ ಹಂಚಿನಮನಿ (25) ಕೊಲೆಯಾದ ದುರ್ದೈವಿ. ಪ್ರಿಯಕರ ಬಸವರಾಜ್ ಕರ್ನಾವರ್ (33) ಎಂಬಾತ ಬೇರೆ ಮದುವೆಯಾಗಲು ಮುಂದಾಗಿದ್ದನ್ನು ಪ್ರಶ್ನಿಸಿದ್ದೇ ಈ ಕೊಲೆಗೆ ಮುಖ್ಯ ಕಾರಣವಾಗಿದೆ.
ತಂದೆ, ಮಾವನ ಜೊತೆ ಸೇರಿ ಕೃತ್ಯ
ಆರೋಪಿ ಬಸವರಾಜ್ ತನ್ನ ತಂದೆ ಯಲ್ಲಪ್ಪ ಹಾಗೂ ಮಾವ ಲಗಮಪ್ಪ ಅವರೊಂದಿಗೆ ಸೇರಿ ಗಂಗವ್ವಳ ಮೇಲೆ ಕಬ್ಬಿಣದ ರಾಡ್ನಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾನೆ. ಬಳಿಕ ಸಾಕ್ಷ್ಯ ನಾಶಪಡಿಸಲು ಶವವನ್ನು ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಚಂದಗಡ ತಾಲೂಕಿನ ತಿಲಾರಿ ಘಾಟ್ನ ದಟ್ಟ ಅರಣ್ಯ ಪ್ರದೇಶಕ್ಕೆ ಎಸೆದು ಪರಾರಿಯಾಗಿದ್ದರು.
ಸಿಸಿಟಿವಿ ನೆರವಿನಿಂದ ಆರೋಪಿಗಳ ಬಂಧನ
ಮೇ 29 ರಂದು ಕಾಡಿನಲ್ಲಿ ಕೊಳೆತ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆಯಾಗಿತ್ತು. ಪ್ರಕರಣ ದಾಖಲಿಸಿಕೊಂಡ ಚಂದಗಡ ಪೊಲೀಸರು ಹೈವೇ ಸಿಸಿಟಿವಿ ದೃಶ್ಯಾವಳಿಗಳು ಹಾಗೂ ಟೋಲ್ ಗೇಟ್ ದಾಖಲೆಗಳನ್ನು ಜಾಲಾಡಿದ್ದಾರೆ. ಈ ವೇಳೆ ಶವ ಸಾಗಿಸಲು ಬಳಸಿದ ಕಾರಿನ ನಂಬರ್ ಪತ್ತೆಯಾಗಿದ್ದು, ಅದರ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿ ಪ್ರಮುಖ ಆರೋಪಿ ಬಸವರಾಜ್ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.



