ಹೊಸದಿಗಂತ ಡಿಜಿಟಲ್ ಹುಬ್ಬಳ್ಳಿ:
ಪತ್ನಿ ಜೊತೆ ಅನೈತಿಕ ಸಂಬಂಧ ಹೊಂದಿರುವ ಶಂಕೆಯಲ್ಲಿ ವ್ಯಕ್ತಿಯೊಬ್ಬನನ್ನು ಬೆನ್ನಟ್ಟಿ ಹೋಗಿ ಕೊಡಲಿಯಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ ಘಟನೆ ಹುಬ್ಬಳ್ಳಿ ತಾಲೂಕಿನ ಬ್ಯಾಹಟ್ಟಿ ಗ್ರಾಮದ ಬಸ್ ನಿಲ್ದಾಣದ ಸಮೀಪ ನಡೆದಿದೆ.
ಪಕ್ಕಿರೇಶ ಅಕ್ಕಿವಳ್ಳಿ (33) ಕೊಲೆಯಾದ ವ್ಯಕ್ತಿಯಾಗಿದ್ದು, ಪ್ರಕಾಶ ಕರಶೆಟ್ಟಿ ಕೊಲೆ ಆರೋಪಿಯಾಗಿದ್ದಾನೆ.
ಏನಿದು ಘಟನೆ?
ಪಕ್ಕಿರೇಶ ತನ್ನ ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂಬ ಅನುಮಾನ ಪ್ರಕಾಶನಿಗೆ ಇತ್ತು. ಇದೇ ವಿಚಾರವಾಗಿ ಇಬ್ಬರ ನಡುವೆ ಕೆಲ ದಿನಗಳಿಂದ ವೈಮನಸ್ಸು ಉಂಟಾಗಿತ್ತು ಎನ್ನಲಾಗಿದೆ. ಶುಕ್ರವಾರ ರಾತ್ರಿ ಪಕ್ಕಿರೇಶನನ್ನು ಅಡ್ಡಗಟ್ಟಿದ ಪ್ರಕಾಶ, ಈ ಬಗ್ಗೆ ವಾಗ್ವಾದ ನಡೆಸಿದ್ದಾನೆ. ಈ ವೇಳೆ ಪಕ್ಕಿರೇಶ ಸ್ಥಳದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಆದರೆ ಆತನನ್ನು ಬೆನ್ನಟ್ಟಿ ಹೋಗಿರುವ ಆರೋಪಿ, ಕೈಯಲ್ಲಿದ್ದ ಕೊಡಲಿಯಿಂದ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸ್ ಮುಳಗಳು ತಿಳಿಸಿವೆ.
ಗಂಭೀರವಾಗಿ ಗಾಯಗೊಂಡ ಪಕ್ಕಿರೇಶ ರಕ್ತದ ಮಡುವಿನಲ್ಲಿ ಬಿದ್ದಿದ್ದು, ಸ್ಥಳೀಯರು ನೆರವಿಗೆ ಧಾವಿಸುವಷ್ಟರಲ್ಲಿ ಆತ ಮೃತಪಟ್ಟಿದ್ದಾನೆ.
ಘಟನೆ ಕುರಿತು ಮಾಹಿತಿ ಪಡೆದ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಆರೋಪಿಯ ವಿರುದ್ಧ ಕೊಲೆ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.



