ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸರ್ಕಾರದ ಗೃಹಜ್ಯೋತಿ ಉಚಿತ ವಿದ್ಯುತ್ ಯೋಜನೆಯಲ್ಲಿ ಪಾರದರ್ಶಕತೆ ಹೆಚ್ಚಿಸಲು ಮಹತ್ವದ ಬದಲಾವಣೆ ತರಲು ನಿರ್ಧರಿಸಿದೆ.
ಯೋಜನೆಯ ಸೌಲಭ್ಯ ನಿಜವಾದ ಅರ್ಹರಿಗೆ ಮಾತ್ರ ತಲುಪುವಂತೆ ಮನೆ ಮನೆಗೆ ಹೊಸ ಅರ್ಜಿಗಳನ್ನು ವಿತರಿಸಿ ಪರಿಶೀಲನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಮನೆ ಮನೆಗೆ ಪರಿಶೀಲನೆ
ಇಂಧನ ಇಲಾಖೆಯ ಸಿಬ್ಬಂದಿ ಪ್ರತಿಯೊಂದು ಮನೆಗೆ ಭೇಟಿ ನೀಡಿ ಹೊಸ ಅರ್ಜಿಗಳನ್ನು ವಿತರಿಸಲಿದ್ದಾರೆ. ಅರ್ಜಿಯಲ್ಲಿ ನಮೂದಿಸಿದ ವಿವರಗಳು, ಫೋಟೋ ಹಾಗೂ ಫಲಾನುಭವಿಯ ಮಾಹಿತಿಯನ್ನು ಸ್ಥಳದಲ್ಲೇ ಪರಿಶೀಲಿಸಿ ದೃಢೀಕರಿಸಲಾಗುತ್ತದೆ. ಯಾವುದೇ ಅರ್ಹ ಕುಟುಂಬ ಯೋಜನೆಯಿಂದ ವಂಚಿತರಾಗದಂತೆ ಕ್ರಮ ಕೈಗೊಳ್ಳಲಾಗುತ್ತದೆ.
ಇದನ್ನೂ ಓದಿ:
ಒಂದೇ ವ್ಯಕ್ತಿಯ ಹೆಸರಿನಲ್ಲಿ ಒಂದಕ್ಕಿಂತ ಹೆಚ್ಚು ಗೃಹಜ್ಯೋತಿ ಸಂಪರ್ಕ ಹೊಂದಿರುವುದು ಅಥವಾ ಅನರ್ಹರು ಯೋಜನೆಯ ಲಾಭ ಪಡೆಯುತ್ತಿರುವ ಪ್ರಕರಣಗಳನ್ನು ಪತ್ತೆಹಚ್ಚಿ ಅಂತಹ ಸಂಪರ್ಕಗಳನ್ನು ರದ್ದುಗೊಳಿಸಲು ಸರ್ಕಾರ ಮುಂದಾಗಿದೆ. ರಾಜ್ಯದ ನಿವಾಸಿಗಳಿಗೆ ಮಾತ್ರ ಯೋಜನೆಯ ಪ್ರಯೋಜನ ಸಿಗುವಂತೆ ಕಟ್ಟುನಿಟ್ಟಿನ ಕ್ರಮ ಜಾರಿಯಾಗಲಿದೆ.
ಗ್ಯಾರಂಟಿ ಮೇಲ್ವಿಚಾರಣೆಗೆ ಸಮಿತಿ
ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನವನ್ನು ಸಮರ್ಪಕವಾಗಿ ಪರಿಶೀಲಿಸಲು ಪಂಚಾಯಿತಿ ಮಟ್ಟದಲ್ಲಿ ವಿಶೇಷ ಸಮಿತಿಗಳನ್ನು ರಚಿಸಲಾಗುತ್ತದೆ. ಫಲಾನುಭವಿಗಳ ಅರ್ಹತೆ ಪರಿಶೀಲಿಸಲು ಅಧಿಕಾರಿಗಳಿಗೂ ಪ್ರತ್ಯೇಕ ಜವಾಬ್ದಾರಿ ನೀಡಲಾಗುತ್ತದೆ ಎಂದರು.



