ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಶಾಶ್ವತ ನಿವಾಸ ಪ್ರಮಾಣಪತ್ರ ನೀಡುವ ಹೊಸ ಮಾರ್ಗಸೂಚಿಯನ್ನು ಜಾರಿಗೆ ತಂದಿರುವ ರಾಜ್ಯ ಸರ್ಕಾರ, ಮತದಾರರ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಹೆಸರು ಕಳೆದುಕೊಳ್ಳದಂತೆ ಅಗತ್ಯ ಕ್ರಮಗಳನ್ನು ಕೈಗೊಂಡಿದೆ.
ಇಂದಿನಿಂದ ಆರಂಭವಾಗಲಿರುವ ಎಸ್ಐಆರ್ ಪ್ರಕ್ರಿಯೆಯಲ್ಲಿ 18 ವರ್ಷ ತುಂಬಿದ ಪ್ರತಿಯೊಬ್ಬ ಅರ್ಹ ನಾಗರಿಕರೂ ಕಡ್ಡಾಯವಾಗಿ ಎಣಿಕೆ ಫಾರ್ಮ್ ಭರ್ತಿ ಮಾಡಿ ಸಲ್ಲಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ. ಫಾರ್ಮ್ ಸಲ್ಲಿಸದಿದ್ದರೆ ಮತದಾರರ ಪಟ್ಟಿಯಿಂದ ಹೆಸರು ಕಳೆದುಕೊಳ್ಳುವ ಸಾಧ್ಯತೆ ಇದೆ. ಆಗಸ್ಟ್ 5ರಂದು ಕರಡು ಮತದಾರರ ಪಟ್ಟಿ ಪ್ರಕಟವಾಗಲಿದ್ದು, ಅದಕ್ಕೂ ಮುನ್ನ ಎಲ್ಲರೂ ನೋಂದಣಿ ಪೂರ್ಣಗೊಳಿಸಬೇಕು ಎಂದು ಹೇಳಿದರು.
ಜೂನ್ 30ರಿಂದ ಜುಲೈ 29ರವರೆಗೆ ನಡೆಯುವ ಈ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗ ನೇಮಿಸಿರುವ ಬೂತ್ ಮಟ್ಟದ ಅಧಿಕಾರಿಗಳು ಮನೆಮನೆಗೆ ತೆರಳಿ ಫಾರ್ಮ್ ವಿತರಿಸಲಿದ್ದು, ಪ್ರತಿಯೊಬ್ಬ ಮತದಾರರು ಅದನ್ನು ಭರ್ತಿ ಮಾಡಿ ಹಿಂದಿರುಗಿಸಬೇಕು ಎಂದು ತಿಳಿಸಿದರು.
ಮತದಾರರು ತಮ್ಮ ಗುರುತಿನ ಚೀಟಿ ಸಂಖ್ಯೆಯನ್ನು ಬಳಸಿ ಮಾಹಿತಿ ಸಲ್ಲಿಸಬಹುದು. ಜನನ ಪ್ರಮಾಣಪತ್ರ, ಪಾಸ್ಪೋರ್ಟ್, ಜಾತಿ ಪ್ರಮಾಣಪತ್ರ, ಅರಣ್ಯ ಹಕ್ಕು ಕಾಯ್ದೆಯ ದಾಖಲೆಗಳು, ಸರ್ಕಾರಿ ನಿವೇಶನ ಅಥವಾ ಮನೆ ಹಂಚಿಕೆ ದಾಖಲೆಗಳು, ಕೇಂದ್ರ ಸರ್ಕಾರದ ಪಿಂಚಣಿ ದಾಖಲೆಗಳು ಸೇರಿದಂತೆ 11 ವಿಧದ ದಾಖಲೆಗಳನ್ನು ಚುನಾವಣಾ ಆಯೋಗ ಮಾನ್ಯಗೊಳಿಸಿದೆ ಎಂದು ಸಿಎಂ ವಿವರಿಸಿದರು.



