ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಉಳ್ಳೇನಹಳ್ಳಿ ಗ್ರಾಮದಲ್ಲಿ ಹುಚ್ಚುನಾಯಿಯೊಂದು ರಕ್ಕಸನಂತೆ ಮುಗಿಬಿದ್ದು ಇಬ್ಬರು ಮುಗ್ಧ ಮಕ್ಕಳು ಸೇರಿದಂತೆ ಒಟ್ಟು ಎಂಟು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಗ್ರಾಮದ ರಸ್ತೆಯಲ್ಲಿ ಓಡಾಡುತ್ತಿದ್ದವರ ಮೇಲೆ ನಾಯಿ ದಿಢೀರ್ ದಾಳಿ ನಡೆಸಿದ್ದು, ಸದ್ಯ ಇಡೀ ಗ್ರಾಮದಲ್ಲಿ ತೀವ್ರ ಆತಂಕ ಮತ್ತು ಭೀತಿಯ ವಾತಾವರಣ ನಿರ್ಮಾಣವಾಗಿದೆ.
ರಾಜು, ರಘು, ಅಂಜಲಿ, ಮಂಜಯ್ಯ ಹಾಗೂ ಇಬ್ಬರು ಅಪ್ರಾಪ್ತ ಮಕ್ಕಳು ಸೇರಿದಂತೆ ಒಟ್ಟು 8 ಜನರಿಗೆ ನಾಯಿ ದೇಹದ ವಿವಿಧ ಭಾಗಗಳಿಗೆ ಕಚ್ಚಿ ಗಾಯಗೊಳಿಸಿದೆ. ಸದ್ಯ ಗಾಯಾಆಳುಗಳನ್ನು ತಕ್ಷಣವೇ ಸ್ಥಳೀಯ ಕೊಣನೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ:
ಮಿತಿಮೀರಿದ ಶ್ವಾನ ಹಾವಳಿ: ಗ್ರಾಮಸ್ಥರ ಆಕ್ರೋಶ
ಉಳ್ಳೇನಹಳ್ಳಿ ಗ್ರಾಮದಲ್ಲಿ ಇತ್ತೀಚಿನ ದಿನಗಳಲ್ಲಿ ಬೀದಿನಾಯಿಗಳ ಕಾಟ ವಿಪರೀತವಾಗಿದ್ದು, ಮಕ್ಕಳು ಮತ್ತು ವೃದ್ಧರು ಮನೆಯಿಂದ ಹೊರಬರಲು ನಡುಗುವಂತಾಗಿದೆ. ಬೀದಿನಾಯಿಗಳ ಸಮಸ್ಯೆ ತಡೆಗಟ್ಟುವಲ್ಲಿ ಸ್ಥಳೀಯ ಆಡಳಿತ ಸಂಪೂರ್ಣ ವಿಫಲವಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಕೂಡಲೇ ನಾಯಿಗಳನ್ನು ಹಿಡಿಯಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.



