ಹೊಸದಿಗಂತ ವರದಿ ಬೆಳಗಾವಿ :
ಜಿಲ್ಲೆಯ ಖಾನಾಪುರ ತಾಲೂಕಿನ ಕಕ್ಕೇರಿ ಗ್ರಾಮದ ಹೊಸ ಗೌಟನ್ ಪ್ರದೇಶದಲ್ಲಿ ಬಡ ಕುಟುಂಬಗಳನ್ನು ಗುರಿಯಾಗಿಸಿಕೊಂಡು ಆಮಿಷಗಳ ಮೂಲಕ ಮತಾಂತರಕ್ಕೆ ಪ್ರೇರೇಪಿಸಲು ಯತ್ನಿಸಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಗ್ರಾಮದಲ್ಲಿ ತೀವ್ರ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.
ಘಟನೆಯ ವಿವರ:
ಸ್ಥಳೀಯ ಮೂಲಗಳ ಪ್ರಕಾರ, ಕಕ್ಕೇರಿ ಗ್ರಾಮದ ಹೊಸ ಗೌಟನ್ ವ್ಯಾಪ್ತಿಯಲ್ಲಿ ಕೆಲ ವ್ಯಕ್ತಿಗಳು ಬಡ ಮತ್ತು ಅಮಾಯಕ ಕುಟುಂಬಗಳನ್ನು ಸಂಪರ್ಕಿಸಿ, ವಿವಿಧ ಆಮಿಷಗಳನ್ನು ಒಡ್ಡುವ ಮೂಲಕ ಧಾರ್ಮಿಕ ಮತಾಂತರಕ್ಕೆ ಪ್ರಚೋದನೆ ನೀಡುತ್ತಿದ್ದರು ಎನ್ನಲಾಗಿದೆ. ಈ ವಿಷಯದ ಕುರಿತು ಖಚಿತ ಮಾಹಿತಿ ಪಡೆದ ಬಜರಂಗದಳದ ಕಾರ್ಯಕರ್ತರು ತಕ್ಷಣವೇ ಸ್ಥಳಕ್ಕೆ ಧಾವಿಸಿದ್ದಾರೆ. ಮತಾಂತರ ಯತ್ನದಲ್ಲಿ ತೊಡಗಿದ್ದ ಎನ್ನಲಾದ ವ್ಯಕ್ತಿಗಳನ್ನು ತರಾಟೆಗೆ ತೆಗೆದುಕೊಂಡ ಕಾರ್ಯಕರ್ತರು, ಅವರ ಕೃತ್ಯಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ಉಭಯ ಬಣಗಳ ನಡುವೆ ಮಾತಿನ ಚಕಮಕಿ ನಡೆದು, ಪರಿಸ್ಥಿತಿ ಕೈಮೀರುವ ಮುನ್ಸೂಚನೆ ಸಿಗುತ್ತಿದ್ದಂತೆ ಸಂಬಂಧಪಟ್ಟ ವ್ಯಕ್ತಿಗಳು ಸ್ಥಳದಿಂದ ಕಾಲ್ಕಿತ್ತಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಕಟ್ಟುನಿಟ್ಟಿನ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ:
ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಬಜರಂಗದಳ ಹಾಗೂ ವಿವಿಧ ಹಿಂದೂ ಸಂಘಟನೆಗಳ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಗ್ರಾಮದಲ್ಲಿ ತುರ್ತು ಪ್ರತಿಭಟನೆ ನಡೆಸಿದರು. ಶಾಂತಿಯುತವಾಗಿರುವ ಕಕ್ಕೇರಿ ಗ್ರಾಮದಲ್ಲಿ ಕಾನೂನುಬಾಹಿರ ಧಾರ್ಮಿಕ ಪ್ರಚಾರ ಅಥವಾ ಅಕ್ರಮ ಚಟುವಟಿಕೆಗಳಿಗೆ ಯಾವುದೇ ಕಾರಣಕ್ಕೂ ಆಸ್ಪದ ನೀಡಬಾರದು. ಇಂತಹ ಕೃತ್ಯಗಳ ಹಿಂದೆ ದೊಡ್ಡ ಜಾಲವೇ ಅಡಗಿದ್ದು, ಅಮಾಯಕರ ದಾರಿತಪ್ಪಿಸುವ ಕೆಲಸ ನಿರಂತರವಾಗಿ ನಡೆಯುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು.
ಸ್ಥಳೀಯರ ಒತ್ತಾಯ:
ಈ ಘಟನೆಯ ಕುರಿತು ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತವು ಕೇವಲ ಮೇಲ್ನೋಟದ ಪರಿಶೀಲನೆ ನಡೆಸದೇ, ಸೂಕ್ತ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಇದರ ಹಿಂದಿರುವ ವಾಸ್ತವಾಂಶಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಬೇಕು.
ಪೊಲೀಸ್ ಇಲಾಖೆಯ ಮೌನಕ್ಕೆ ಸಾರ್ವಜನಿಕರ ಅಸಮಾಧಾನ:
ಗ್ರಾಮದಲ್ಲಿ ಇಷ್ಟೆಲ್ಲಾ ಗದ್ದಲ ಸಂಭವಿಸಿ, ಸಾರ್ವಜನಿಕ ವಲಯದಲ್ಲಿ ಆತಂಕ ಮೂಡಿದ್ದರೂ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್ ಇಲಾಖೆ ತಕ್ಷಣವೇ ಸ್ಪಂದಿಸದೆ ಮೌನಕ್ಕೆ ಶರಣಾಗಿದೆ ಎಂದು ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸದ್ಯ ಗ್ರಾಮದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಉನ್ನತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸೂಕ್ತ ತನಿಖೆ ಕೈಗೊಂಡ ಬಳಿಕವಷ್ಟೇ ಘಟನೆಯ ಸಂಪೂರ್ಣ ಸತ್ಯಾಸತ್ಯತೆ ಬೆಳಕಿಗೆ ಬರಬೇಕಿದೆ.



