ಹೊಸದಿಗಂತ ವರದಿ ಬೆಳಗಾವಿ :
ನಗರದಲ್ಲಿ ಗುರುವಾರ ರಾತ್ರಿ ಸುರಿದ ಭಾರಿ ಮಳೆಯಿಂದ ಕುಮಾರಸ್ವಾಮಿ ಬಡಾವಣೆ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಹಲವು ಮರಗಳು ರಸ್ತೆಗೆ ಉರುಳಿ ಬಿದ್ದ ಪರಿಣಾಮ ಕೆಲಕಾಲ ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಯಿತು.
ರಸ್ತೆ ಮಧ್ಯೆ ಮರಗಳು ಬಿದ್ದಿದ್ದರಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ಪರದಾಡುವಂತಾಯಿತು. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಅಥವಾ ಗಾಯಗಳ ಸಂಭವಿಸಿಲ್ಲ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಮಹಾನಗರ ಪಾಲಿಕೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ತುರ್ತು ಕಾರ್ಯಾಚರಣೆ ಕೈಗೊಂಡರು. ಆಧುನಿಕ ಯಂತ್ರೋಪಕರಣಗಳ ಸಹಾಯದಿಂದ ಸುಮಾರು ಎರಡು ಗಂಟೆಗಳ ಕಾರ್ಯಾಚರಣೆಯಲ್ಲಿ ರಸ್ತೆಗೆ ಬಿದ್ದಿದ್ದ ಮರಗಳನ್ನು ತೆರವುಗೊಳಿಸಿ, ವಾಹನ ಸಂಚಾರವನ್ನು ಪುನಃ ಸುಗಮಗೊಳಿಸಿದರು.
“ಮಾಹಿತಿ ದೊರೆತ ತಕ್ಷಣ ಸಿಬ್ಬಂದಿ ಕಾರ್ಯಾಚರಣೆಗೆ ಇಳಿದ ಪರಿಣಾಮ ಸಂಚಾರದ ಅಡಚಣೆಯನ್ನು ಶೀಘ್ರದಲ್ಲೇ ನಿವಾರಿಸಲು ಸಾಧ್ಯವಾಯಿತು,” ಎಂದು ಪಾಲಿಕೆ ಪರಿಸರ ವಿಭಾಗದ ಇಂಜಿನಿಯರ್ ಹನುಮಂತ ಕಲಾದಗಿ ತಿಳಿಸಿದ್ದಾರೆ.
ಪಾಲಿಕೆ ಸಿಬ್ಬಂದಿಯ ತ್ವರಿತ ಸ್ಪಂದನೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜೊತೆಗೆ, ಮಳೆಗಾಲದ ಹಿನ್ನೆಲೆಯಲ್ಲಿ ಅಪಾಯಕಾರಿಯಾಗಿರುವ ಒಣಗಿದ ಹಾಗೂ ಬಾಗಿದ ಮರಗಳನ್ನು ಮುಂಚಿತವಾಗಿ ಗುರುತಿಸಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಮಹಾನಗರ ಪಾಲಿಕೆಗೆ ಸಾರ್ವಜನಿಕರು ಮನವಿ ಮಾಡಿದ್ದಾರೆ.



