August 19, 2026
Wednesday, August 19, 2026
spot_img

ಬೆಂಗಳೂರಿನ ಕೆಆರ್‌ ಸರ್ಕಲ್‌ನಲ್ಲಿ ಬಿಎಂಟಿಸಿ ಬಸ್‌ಗಳ ನಡುವೆ ಡಿಕ್ಕಿ: ಚಾಲಕ ಸೇರಿ ಪ್ರಯಾಣಿಕರಿಗೆ ಗಂಭೀರ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೆಂಗಳೂರಿನ ಕೆ.ಆರ್. ಸರ್ಕಲ್ ಬಳಿ ಇಂದು ಬೆಳಗ್ಗೆ ಎರಡು ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ ಸಂಭವಿಸಿದ್ದು, ಬಸ್‌ನ ಚಾಲಕರು ಸೇರಿದಂತೆ ಹಲವಾರು ಪ್ರಯಾಣಿಕರಿಗೆ ಗಂಭೀರ ಗಾಯವಾಗಿದೆ.

ಇಂದು ಬೆಳಗ್ಗಿನ ಜಾವ ಜನದಟ್ಟಣೆ ಇರುವ ಕೆ.ಆರ್‌ ಸರ್ಕಲ್‌ ಜಂಕ್ಷನ್‌ ಸಿಗ್ನಲ್‌ನಲ್ಲಿ ಬಿಎಂಟಿಸಿಯ ವಾಯುವಜ್ರ ಬಸ್‌ ನಿಂತಿತ್ತು. ಇದೇ ವೇಳೆ ಹಿಂಬದಿಯಿಂದ ಅತಿ ವೇಗವಾಗಿ ಬಂದ ಬಿಎಂಟಿಸಿ ಬಸ್‌ ಸಿಗ್ನಲ್‌ನಲ್ಲಿ ನಿಂತಿದ್ದ ವಾಯುವಜ್ರ ಬಸ್‌ಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಸಾಮಾನ್ಯ ಬಿಎಂಟಿಸಿ ಬಸ್‌ನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ. ಬಸ್‌ ಚಾಲಕನಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೊಬ್ಬ ಮಹಿಳೆಗೆ ಗಂಭೀರ ಗಾಯವಾಗಿ ಕಾಲು ಸಿಕ್ಕಿಹಾಕಿಕೊಂಡು ತೆಗೆಯಲು ಹರಸಾಹಸಪಟ್ಟರು. ಕಬ್ಬಿಣದ ಸಲಾಕೆಗಳನ್ನ ತುಂಡರಿಸಿ ಮಹಿಳೆಯನ್ನು ಹೊರ ತೆಗೆಯಲಾಯಿತು.

ಬೆಳಗ್ಗಿನ ಅವಧಿಯಾಗಿದ್ದರಿಂದ ಬಸ್‌ಗಳಲ್ಲಿ ಕಚೇರಿ ಹಾಗೂ ದೈನಂದಿನ ಕೆಲಸ ಕಾರ್ಯಗಳಿಗೆ ತೆರಳುತ್ತಿದ್ದ ಪ್ರಯಾಣಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಇದ್ದಕ್ಕಿದ್ದಂತೆ ಸಂಭವಿಸಿದ ಈ ಘೋರ ಅಪಘಾತದಿಂದಾಗಿ ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ತೀವ್ರ ತೊಂದರೆಯುಂಟಾಯಿತು. ಅಪಘಾತದ ತೀವ್ರತೆಗೆ ಬಸ್‌ನ ಮುಂಭಾಗದ ಸೀಟುಗಳಲ್ಲಿದ್ದ ಹಲವು ಮಹಿಳಾ ಪ್ರಯಾಣಿಕರಿಗೆ ತಲೆ ಹಾಗೂ ಕೈಕಾಲುಗಳಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !