ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಜಲಾಶಯಗಳಲ್ಲಿ ನೀರಿಲ್ಲ, ರೈತರು ಬೆಳೆ ಬೆಳೆಯಬೇಡಿ ಎಂದು ಮುಖ್ಯಮಂತ್ರಿ ಹೇಳಿರುವುದು ಆಶ್ಚರ್ಯಕರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಿಡಿಕಾರಿದ್ದಾರೆ.
ಭೀಕರ ಬರಗಾಲದ ಮುನ್ಸೂಚನೆ ಇದೆ. ರಾಜ್ಯದ ಜಲಾಶಯಗಳಲ್ಲಿ ನೀರಿಲ್ಲ. ಅದಕ್ಕಾಗಿ ರೈತರು ಬೆಳೆ ಬೆಳೆಯಬೇಡಿ ಎಂದು ಸಿಎಂ ಹೇಳಿರುವುದು ಆಶ್ಚರ್ಯ ಹಾಗೂ ನೋವು ತಂದಿದೆ. ಮುಖ್ಯಮಂತ್ರಿಯವರ ಈ ಹೇಳಿಕೆ ರಾಜ್ಯದ ರೈತರ ಆತ್ಮಸ್ಥೈರ್ಯ ಕುಗ್ಗಿಸುವ ಕೆಲಸ ಮಾಡಿದೆ. ಮುಖ್ಯಮಂತ್ರಿಗಳು ಬಹಳ ಪ್ರಬುದ್ಧತೆಯಿಂದ ಮಾತನಾಡಬೇಕು ಎಂದು ವಾಗ್ದಾಳಿ ನಡೆಸಿದರು. ಕೃಷ್ಣರಾಜ ಸಾಗರ (ಕೆಆರ್ಎಸ್) ಅಣೆಕಟ್ಟಿನಿಂದ ತಮಿಳುನಾಡಿಗೆ ಬಿಡುಗಡೆ ಮಾಡಲಾದ ಕಾವೇರಿ ನೀರಿನ ಪ್ರಮಾಣವನ್ನು ಬಹಿರಂಗಪಡಿಸಿ ಆನಂತರ ಮಾತಾಡೋಣ. ನಮ್ಮ ರೈತರು ಬೆಳೆ ಬೆಳೆದರೆ ತಾನೆ ನಮಗೆ ಅನ್ನ, ಅವರಿಗೂ ಅನ್ನ. ಹೀಗಿರುವಾಗ ನೀವು ಬೆಳೆ ಬೆಳೆಯಬೇಡಿ ಎಂದು ಹೇಳಿದರೆ ರೈತರ ಗತಿ ಏನು ಎಂದು ಪ್ರಶ್ನಿಸಿದ್ದಾರೆ.
ರಾಜ್ಯದಲ್ಲಿ ಮಾತ್ರವಲ್ಲ, ಇಡೀ ದೇಶದಲ್ಲೇ ಬರದ ಛಾಯೆ ಆವರಿಸಿದೆ. ಪ್ರಕೃತಿ ಮುನಿಸಿಕೊಂಡಿರುವ ಈ ಸಂದರ್ಭದಲ್ಲಿ ರೈತರಿಗೆ ಅಭಯ ನೀಡಬೇಕು. ಮುಂದಿನ 15 ದಿನಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಆದರೆ ಸಿಎಂ ಬಿತ್ತನೆ ಮಾಡಬೇಡಿ ಎಂದು ಹೇಳಿದ್ದಾರೆ. ರೈತರು ಬಿತ್ತನೆ ಮಾಡದೇ ಇದ್ದರೆ ಅದಕ್ಕೆ ಯಾರು ಹೊಣೆ ಎಂದು ಪ್ರಶ್ನಿಸಿದರು.



