ಹೊಸದಿಗಂತ ವರದಿ ಯಲ್ಲಾಪುರ:
ತಾಲೂಕಿನ ಚಿಕ್ಕಮಾವಳ್ಳಿ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ -52ರಲ್ಲಿ ಬಸ್, ಕಾರು ಹಾಗೂ ಸ್ಕೂಟಿ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತರನ್ನು ಹುಬ್ಬಳ್ಳಿಯ ನಿವಾಸಿಗಳಾದ ಮಂಜುನಾಥ ಚಂದ್ರಶೇಖರ ಗೌಡರ (27) ಹಾಗೂ ಸುಮೀತ ಅರ್ಜುನ ಹನಮನಹಳ್ಳಿ (18) ಎಂದು ಗುರುತಿಸಲಾಗಿದೆ.
ಪೊಲೀಸರ ಮಾಹಿತಿ ಪ್ರಕಾರ, ಕಾರವಾರದಿಂದ ಕರ್ತವ್ಯ ಮುಗಿಸಿ ಹಿಂದಿರುಗುತ್ತಿದ್ದ ಕೆಎಸ್ಆರ್ಟಿಸಿ ಬಸ್ ಎದುರಿಗೆ ಯಲ್ಲಾಪುರ ಕಡೆಯಿಂದ ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದ ಸ್ಕೂಟಿ ಕಾರನ್ನು ಓವರ್ಟೇಕ್ ಮಾಡಲು ಯತ್ನಿಸಿದ ವೇಳೆ ಸ್ಕೂಟಿ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಬಸ್ಗೆ ಡಿಕ್ಕಿ ಹೊಡೆದಿದ್ದು, ಬಳಿಕ ಕಾರಿಗೂ ತಗುಲಿ ಸರಣಿ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಅಪಘಾತದ ತೀವ್ರತೆಗೆ ಸ್ಕೂಟಿ ಸವಾರರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಸ್ಕೂಟಿ ಸಂಪೂರ್ಣ ಜಖಂಗೊಂಡಿದ್ದು, ಕಾರು ಹಾಗೂ ಬಸ್ಗೂ ಹಾನಿಯಾಗಿದೆ. ಕೆಎಸ್ಆರ್ಟಿಸಿ ಬಸ್ನ ನಿರ್ವಾಹಕ ಸುರೇಶ ನಿಂಗಪ್ಪ ಗುಜ್ಜೆವಾಡ ನೀಡಿದ ದೂರಿನ ಮೇರೆಗೆ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಬಸ್ನಲ್ಲಿ ಅಳವಡಿಸಲಾಗಿದ್ದ ಡ್ಯಾಶ್ಕ್ಯಾಮ್ ದೃಶ್ಯಗಳನ್ನೂ ಪರಿಶೀಲಿಸಲಾಗುತ್ತಿದೆ.



