ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಾಜಿನಗರದ ಶಾಸಕ ಎಸ್. ಸುರೇಶ್ ಕುಮಾರ್ ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಅನುದಾನ ಹಾಗೂ ಪಾಲಿಕೆ ವತಿಯಿಂದ ಹಮ್ಮಿಕೊಳ್ಳಲಾದ ವಿವಿಧ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆಗಳಲ್ಲಿ ನಿಯಮಬಾಹಿರವಾಗಿ ಬೇನಾಮಿ ಗುತ್ತಿಗೆದಾರರಿಗೆ ಲಾಭ ಮಾಡಿಕೊಟ್ಟಿದ್ದಾರೆ. 300 ಕೋಟಿ ರೂಪಾಯಿ ಟೆಂಡರ್ ಅಕ್ರಮ ಎಸಗಿದ್ದಾರೆ ಎನ್ನುವ ಆರೋಪ ಎದುರಾಗಿದೆ.
ನೂರಾರು ಕಾಂಗ್ರೆಸ್ ಕಾರ್ಯಕರ್ತರು ಇದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ.ಶಾಸಕರು ರಾಜಾಜಿನಗರದ ಆರ್ಟಿಒ ಕಚೇರಿಯಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸುತ್ತಿದ್ದ ವೇಳೆ ಎನ್ಎಸ್ಯುಐ ಯೂತ್ ಕಾಂಗ್ರೆಸ್ನ ಕಾರ್ಯಕರ್ತರು, ಶಾಸಕರಿಗೆ ಮುತ್ತಿಗೆಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆ ಭಾರೀ ಹೈಡ್ರಾಮಾವೇ ನಡೆದಿದೆ.
ʻಕೈʼ ಕಾರ್ಯಕರ್ತರು ಭಾರೀ ಸಂಖ್ಯೆಯಲ್ಲಿ ಪ್ರತಿಭಟನೆಗೆ ಬರುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಆರ್ಟಿಒ ರಸ್ತೆ ಕ್ಲೋಸ್ ಮಾಡಿದ್ದಾರೆ. ರಸ್ತೆಯ ಎರಡು ಬದಿಗೆ ಬ್ಯಾರಿಕೇಡ್ ಹಾಕಿ ರಸ್ತೆ ಬಂದ್ ಮಾಡಿಸಿದ್ದಾರೆ. ಜೊತೆಗೆ ಜನಸ್ಪಂದನ ಕಾರ್ಯಕ್ರಮ ನಡೆಯುತ್ತಿದ್ದ ಕಚೇರಿ ಮುಂಭಾಗದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ನಿಯೋಜಿಸಿದ್ದಾರೆ.
ಧಿಕ್ಕಾರ ಕೂಗುತ್ತಲೇ ಆರ್ಟಿಒ ಕಚೇರಿ ಒಳಕ್ಕೆ ನುಗ್ಗಲು ಕಾರ್ಯಕರ್ತರು ಯತ್ನಿಸಿದ್ದಾರೆ.ದೇ ವೇಳೆ ಬಿಜೆಪಿ ಕಾರ್ಯಕರ್ತರು ಮುಖಾಮುಖಿಯಾಗಿದ್ದು, ಕೈಕೈ ಮಿಲಾಯಿಸುವ ಹಂತಕ್ಕೆ ಹೋಗಿದ್ದಾರೆ. ಅಷ್ಟರಲ್ಲಿ ಬ್ಯಾರಿಕೇಡ್ ಅಳವಡಿಸಿದ್ದ ಪೊಲೀಸರು ಎರಡೂ ಪಕ್ಷದ ಕಾರ್ಯಕರ್ತರನ್ನ ಚದುರಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತೆಗದುಕೊಂಡಿದ್ದಾರೆ.



