July 7, 2026
Tuesday, July 7, 2026
spot_img

ಜು.9ರಂದು ಡಿ.ಕೆ. ಶಿವಕುಮಾರ್ ಬೆಳಗಾವಿಗೆ ಭೇಟಿ; ಸುವರ್ಣ ವಿಧಾನಸೌಧದಲ್ಲಿ ಪ್ರಗತಿ ಪರಿಶೀಲನಾ ಸಭೆ

ಹೊಸದಿಗಂತ ವರದಿ ಬೆಳಗಾವಿ :

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜುಲೈ 9ರಂದು ಬೆಳಗಾವಿ ಜಿಲ್ಲೆಗೆ ಪ್ರವಾಸ ಕೈಗೊಳ್ಳಲಿದ್ದು, ಸುವರ್ಣ ವಿಧಾನಸೌಧದಲ್ಲಿ ಪ್ರಾದೇಶಿಕ ವಿಭಾಗ ಮಟ್ಟದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ.

ಗುರುವಾರ ಬೆಳಿಗ್ಗೆ 9 ಗಂಟೆಗೆ ಬೆಂಗಳೂರಿನ ಹೆಚ್.ಎ.ಎಲ್. ವಿಮಾನ ನಿಲ್ದಾಣದಿಂದ ವಿಶೇಷ ವಿಮಾನ ಮೂಲಕ ಪ್ರಯಾಣ ಬೆಳೆಸಿ, ಬೆಳಿಗ್ಗೆ 10.10ಕ್ಕೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ ರಸ್ತೆ ಮಾರ್ಗವಾಗಿ 10.30ಕ್ಕೆ ಸುವರ್ಣ ವಿಧಾನಸೌಧಕ್ಕೆ ತೆರಳಿ, ಬೆಳಗಾವಿ ಪ್ರಾದೇಶಿಕ ವಿಭಾಗ ಮಟ್ಟದ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.
ಸಭೆ ಬಳಿಕ ಮಧ್ಯಾಹ್ನ 3 ಗಂಟೆಗೆ ಸುವರ್ಣ ವಿಧಾನಸೌಧದಿಂದ ಹೊರಟು 3.15ಕ್ಕೆ ಸಾಂಬ್ರಾ ವಿಮಾನ ನಿಲ್ದಾಣ ತಲುಪಲಿದ್ದು, 3.20ಕ್ಕೆ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ. ಸಂಜೆ 4.30ಕ್ಕೆ ಬೆಂಗಳೂರಿನ ಹೆಚ್.ಎ.ಎಲ್. ವಿಮಾನ ನಿಲ್ದಾಣ ತಲುಪಲಿದ್ದಾರೆ.

ಮುಖ್ಯಮಂತ್ರಿಯವರ ಪ್ರವಾಸದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಅಗತ್ಯ ಶಿಷ್ಠಾಚಾರ, ಭದ್ರತೆ, ಸಂಚಾರ ಮತ್ತು ಇತರೆ ವ್ಯವಸ್ಥೆಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ. ಅಲ್ಲದೆ, ಜಿಲ್ಲೆಯ ಎಲ್ಲ ಶಾಸಕರು, ಸಂಸದರು ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ಸೇರಿದಂತೆ ಗಣ್ಯರಿಗೆ ಪ್ರವಾಸ ಕಾರ್ಯಕ್ರಮದ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ನಿರ್ದೇಶನ ನೀಡಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !