ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಮುಂಗಾರು ಅಬ್ಬರ ಜೋರಾಗಿದ್ದು, ಪ್ರಮುಖ ಜಲಾಶಯಗಳಿಗೆ ನೀರಿನ ಒಳಹರಿವು ಹೆಚ್ಚಾಗಿದೆ.
ಹಾಸನದಲ್ಲಿ ವರುಣನ ಅಬ್ಬರ ಮುಂದುವರಿದಿದ್ದು, ಸಕಲೇಶಪುರ, ಆಲೂರು, ಬೇಲೂರು, ಅರಕಲಗೂಡು ಭಾಗಗಳಲ್ಲಿ ಗಾಳಿಯೊಂದಿಗೆ ನಿರಂತರವಾಗಿ ಮಳೆಯಾಗುತ್ತಿದೆ. ಚಿಕ್ಕಮಗಳೂರು ಜಿಲ್ಲೆ, ಮೂಡಿಗೆರೆ ಭಾಗದಲ್ಲೂ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ಜೀವನದಿ ಹೇಮಾವತಿ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆಯಾಗಿದೆ.
ಹಾಸನ ತಾಲೂಕಿನ, ಗೊರೂರಿನಲ್ಲಿರುವ ಹೇಮಾವತಿ ಜಲಾಶಯಕ್ಕೆ 16,593 ಕ್ಯೂಸೆಕ್ ಒಳಹರಿವಿದ್ದು, 300 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. 37.103 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ಹೇಮಾವತಿ ಜಲಾಶಯದಲ್ಲಿ ಸದ್ಯ 18.782 ಟಿಎಂಸಿ ನೀರು ಸಂಗ್ರಹವಾಗಿದೆ.
ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಚುರುಕಾಗಿರುವುದರಿಂದ ಮಂಡ್ಯದ ಕೃಷ್ಣರಾಜಸಾಗರ ಡ್ಯಾಂ ನೀರಿನ ಮಟ್ಟದಲ್ಲಿ ಸುಧಾರಣೆ ಕಂಡುಬಂದಿದೆ.ನಿನ್ನೆ ಬೆಳಗ್ಗೆ 5,734 ಕ್ಯೂಸೆಕ್ ಇದ್ದ ಒಳಹರಿವು ಮತ್ತಷ್ಟು ಹೆಚ್ಚಾಗಿದೆ. ನೀರಿನ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವುದು ರೈತರ ಮೊಗದಲ್ಲಿ ಸಂತಸ ತಂದಿದೆ.



