ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಸಿ. ಜೋಸೆಫ್ ವಿಜಯ್ ಇಂದು ಬುಧವಾರ ತಮ್ಮ ಮೊದಲ ಅನಿರೀಕ್ಷಿತ ತಪಾಸಣೆ ನಡೆಸಿದ್ದಾರೆ. ಚೆನ್ನೈನ ಎಗ್ಮೋರ್ನಲ್ಲಿರುವ ಸರ್ಕಾರಿ ಮಕ್ಕಳ ಆಸ್ಪತ್ರೆಯಲ್ಲಿ ಲಂಚ ವಸೂಲಿ ಮತ್ತು ಕಳಪೆ ಸ್ವಚ್ಛತೆ ಇರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಸಿಎಂ ಈ ಕ್ರಮ ಕೈಗೊಂಡಿದ್ದಾರೆ.
ಖುದ್ದಾಗಿ ಪರಿಶೀಲಿಸಿದ ಮುಖ್ಯಮಂತ್ರಿ:
ಸರ್ಕಾರದ ಅಧಿಕೃತ ಪ್ರಕಟಣೆಯ ಪ್ರಕಾರ, ಸಿಎಂ ವಿಜಯ್ ಯಾವುದೇ ಮುನ್ಸೂಚನೆ ಇಲ್ಲದೆ ಆಸ್ಪತ್ರೆಗೆ ಭೇಟಿ ನೀಡಿದರು. ಅವರು ಆಸ್ಪತ್ರೆಯ ವೈದ್ಯರೊಂದಿಗೆ ಸಮಾಲೋಚನೆ ನಡೆಸಿ, ಲಭ್ಯವಿರುವ ವೈದ್ಯಕೀಯ ಸೌಲಭ್ಯಗಳನ್ನು ಪರಿಶೀಲಿಸಿದರು. ಅಲ್ಲದೆ, ವಾರ್ಡ್ಗಳಲ್ಲಿ ದಾಖಲಾಗಿರುವ ಬಾಣಂತಿಯರ ಜತೆ ನೇರವಾಗಿ ಮಾತನಾಡಿ ಸಮಸ್ಯೆಗಳನ್ನು ಆಲಿಸಿದರು. ಮುಖ್ಯಮಂತ್ರಿಗಳು ನವಜಾತ ಶಿಶುಗಳನ್ನು ಕೈಯಲ್ಲಿ ಎತ್ತಿ ಮುದ್ದಾಡುತ್ತಿರುವ ಮತ್ತು ವೈದ್ಯಕೀಯ ಸಿಬ್ಬಂದಿ ಜತೆ ಚರ್ಚಿಸುತ್ತಿರುವ ಫೋಟೋಗಳನ್ನು ಸರ್ಕಾರ ಬಿಡುಗಡೆ ಮಾಡಿದೆ.
ವೈರಲ್ ವಿಡಿಯೋದಲ್ಲೇನಿತ್ತು?
ಕೆಲವು ದಿನಗಳ ಹಿಂದೆ ಬಡತನ ರೇಖೆಗಿಂತ ಕೆಳಗಿರುವ (BPL) ಕುಟುಂಬದ ಮಹಿಳೆಯೊಬ್ಬರು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದರು. ಆಸ್ಪತ್ರೆಯ ಸಿಬ್ಬಂದಿ ಚಿಕಿತ್ಸೆಗಾಗಿ ಲಂಚದ ಬೇಡಿಕೆ ಇಡುತ್ತಿದ್ದಾರೆ, ರೋಗಿಗಳಿಗೆ ಸಮಯಕ್ಕೆ ಸರಿಯಾಗಿ ಊಟ ನೀಡುತ್ತಿಲ್ಲ ಮತ್ತು ಮೂಲಭೂತ ಸೌಕರ್ಯಗಳು ಅತ್ಯಂತ ಕಳಪೆಯಾಗಿವೆ ಎಂದು ಅವರು ಗಂಭೀರ ಆರೋಪ ಮಾಡಿದ್ದರು.
ಇದನ್ನೂ ಓದಿ:
ಆರೋಗ್ಯ ಸಚಿವರ ತಕ್ಷಣದ ಕ್ರಮ:
ಈ ವಿಡಿಯೋಗೆ ತಕ್ಷಣ ಸ್ಪಂದಿಸಿರುವ ತಮಿಳುನಾಡು ಆರೋಗ್ಯ ಸಚಿವ ಡಾ. ಅರುಣ್ ರಾಜ್, ಲಂಚದ ಆರೋಪ ಎದುರಿಸುತ್ತಿದ್ದ ಗುತ್ತಿಗೆ ಆಧಾರಿತ ಸಿಬ್ಬಂದಿಯನ್ನು ತಕ್ಷಣವೇ ಕೆಲಸದಿಂದ ವಜಾಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. ಆಸ್ಪತ್ರೆಗೆ ಬರುವ ರೋಗಿಗಳ ಪ್ರತಿಕ್ರಿಯೆಯ ಆಧಾರದ ಮೇಲೆ ಆಸ್ಪತ್ರೆಯಲ್ಲಿ ಹೆಚ್ಚುವರಿ ಶೌಚಾಲಯಗಳು, ಹೆಚ್ಚಿನ ವಾರ್ಡ್ಗಳು ಮತ್ತು ಹೊಸ ಕ್ಯಾಂಟೀನ್ ವ್ಯವಸ್ಥೆಯನ್ನು ಕಲ್ಪಿಸಲು ಸರ್ಕಾರ ಶೀಘ್ರದಲ್ಲೇ ಕ್ರಮ ಕೈಗೊಳ್ಳಲಿದೆ ಎಂದು ಅವರು ಭರವಸೆ ನೀಡಿದ್ದಾರೆ.



