July 9, 2026
Thursday, July 9, 2026
spot_img

ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಬೆಳಗಾವಿಗೆ ಡಿ.ಕೆ. ಶಿವಕುಮಾರ್: ಅದ್ಧೂರಿ ಸ್ವಾಗತ

ಹೊಸದಿಗಂತ ವರದಿ ಬೆಳಗಾವಿ:

ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಬೆಳಗಾವಿಗೆ ಆಗಮಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಜಿಲ್ಲಾ ಕಾಂಗ್ರೆಸ್ ನಾಯಕರು, ಶಾಸಕರು ಹಾಗೂ ಸಾವಿರಾರು ಕಾರ್ಯಕರ್ತರು ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಅದ್ಧೂರಿ ಸ್ವಾಗತ ಕೋರಿದರು.

ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೊರಬರುತ್ತಿದ್ದಂತೆಯೇ ಅವರ ಆಗಮನಕ್ಕಾಗಿ ಕಾದು ನಿಂತಿದ್ದ ಕಾರ್ಯಕರ್ತರು ಹಾಗೂ ಅಭಿಮಾನಿಗಳು “ಡಿಕೆ… ಡಿಕೆ…” ಎಂಬ ಜಯಘೋಷ ಮೊಳಗಿಸಿದರು. ಪುಷ್ಪವೃಷ್ಟಿ, ಹೂಗುಚ್ಛಗಳ ಸಮರ್ಪಣೆ ಹಾಗೂ ಸಂಭ್ರಮಾಚರಣೆಯ ಮೂಲಕ ತಮ್ಮ ನೆಚ್ಚಿನ ನಾಯಕನನ್ನು ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಸಚಿವರಾದ ಎಂ.ಬಿ. ಪಾಟೀಲ, ಸತೀಶ ಜಾರಕಿಹೊಳಿ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಅಶೋಕ ಪಟ್ಟಣ, ಬಾಬಾಸಾಹೇಬ ಪಾಟೀಲ, ಆಸೀಫ್ ಸೇಠ್, ವಿಜಯಾನಂದ ಕಾಶಪ್ಪನವರ, ಮಹೇಂದ್ರ ತಮ್ಮಣ್ಣವರ, ವಿಶ್ವಾಸ ವೈದ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ ಸೇರಿದಂತೆ ಪಕ್ಷದ ಹಲವು ಮುಖಂಡರು ಮುಖ್ಯಮಂತ್ರಿ ಅವರನ್ನು ಸ್ವಾಗತಿಸಿದರು. ಬಳಿಕ ಮುಖ್ಯಮಂತ್ರಿ ಪೊಲೀಸ್ ಗೌರವ ವಂದನೆ ಸ್ವೀಕರಿಸಿದರು.

ಇದನ್ನೂ ಓದಿ:

ಸಾಂಬ್ರಾ ವಿಮಾನ ನಿಲ್ದಾಣದ ಹೊರಭಾಗದಲ್ಲಿ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಜಮಾಯಿಸಿದ್ದು, ಮುಖ್ಯಮಂತ್ರಿ ಅವರ ವಾಹನ ಸಾಗುತ್ತಿದ್ದಂತೆ ಜೆಸಿಬಿಗಳ ಮೂಲಕ ಹೂವಿನ ಮಳೆ ಸುರಿಸಲಾಯಿತು. ಪಟಾಕಿ ಸಿಡಿಸಿ, ಘೋಷಣೆಗಳನ್ನು ಕೂಗುವ ಮೂಲಕ ಕಾರ್ಯಕರ್ತರು ಸಂಭ್ರಮಿಸಿದರು.

ಇದಕ್ಕೂ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಜ್ಯದಲ್ಲಿ ಸುರಿಯುತ್ತಿರುವ ಮಳೆಯ ಪರಿಸ್ಥಿತಿ, ಬೆಳೆಗಳ ಸ್ಥಿತಿ ಹಾಗೂ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆಗಾಗಿ ರಾಜ್ಯದ ವಿವಿಧ ಭಾಗಗಳಿಗೆ ಪ್ರವಾಸ ಕೈಗೊಂಡಿರುವುದಾಗಿ ತಿಳಿಸಿದರು.

“ನನ್ನ ಪ್ರವಾಸ ಬಸವಕಲ್ಯಾಣದಿಂದ ಆರಂಭವಾಗಿ ಬೀದರ್ ಮತ್ತು ಕಲಬುರಗಿ ಜಿಲ್ಲೆಗಳ ಬಳಿಕ ಇಂದು ಬೆಳಗಾವಿಗೆ ತಲುಪಿದ್ದೇನೆ. ಸಚಿವರು ಸಹ ಜೊತೆಯಲ್ಲಿದ್ದು, ಈ ಭಾಗದ ಶಾಸಕರೊಂದಿಗೆ ಸಭೆ ನಡೆಸಿ ಅಭಿವೃದ್ಧಿ ಹಾಗೂ ಜನಸಾಮಾನ್ಯರ ಸಮಸ್ಯೆಗಳ ಕುರಿತು ಚರ್ಚೆ ನಡೆಸಲಿದ್ದೇನೆ” ಎಂದು ಅವರು ಹೇಳಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !