ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಬ್ಯಾಡರಹಳ್ಳಿ ವ್ಯಾಪ್ತಿಯಲ್ಲಿ ರಾತ್ರಿ ಹಾಗೂ ಮುಂಜಾನೆ ಚಿರತೆ ಓಡಾಟ ಕಾಣಿಸಿದ್ದು, ಜನ ಮನೆಯಿಂದ ಹೊರಗೆ ಬರೋದಕ್ಕೆ ಹೆದರುತ್ತಿದ್ದಾರೆ.
ಬ್ಯಾಡರಹಳ್ಳಿಯ ಭಾರತ್ ನಗರದಲ್ಲಿ ಗುರುವಾರ ರಾತ್ರಿ ಮತ್ತು ಇಂದು ಮುಂಜಾನೆ ಮತ್ತೆ ಒಂಟಿ ಚಿರತೆ ಕಾಣಿಸಿಕೊಂಡಿದ್ದು, ಇಡೀ ಏರಿಯಾದ ಜನರು ಬೆಚ್ಚಿ ಬಿದ್ದಿದ್ದಾರೆ. ನಿನ್ನೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಚಿರತೆಯ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಸಿಬ್ಬದಿ ಕೇವಲ ಸಿಡಿಮದ್ದುಗಳನ್ನು ಸಿಡಿಸಿದ್ದರು.
ಅರಣ್ಯ ಇಲಾಖೆಯ ಕಣ್ಣಿಗೆ ಮಣ್ಣೆರಚಿರುವ ಚಿರತೆ, ನಿನ್ನೆ ರಾತ್ರಿ 9 ಗಂಟೆಗೆ ಹಾಗೂ ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಅದೇ ಜಾಗದಲ್ಲಿ ಮತ್ತೆ ಪ್ರತ್ಯಕ್ಷವಾಗಿದೆ. ಚಿರತೆ ರಾಜಾರೋಷವಾಗಿ ಓಡಾಡುತ್ತಿರುವ ದೃಶ್ಯಗಳು ಅಲ್ಲಿನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾರ್ವಜನಿಕರ ನಿದ್ದೆಗೆಡಿಸಿದೆ. ಭಾರತ್ ನಗರದಲ್ಲಿ ಸಂಪೂರ್ಣ ಮನೆಗಳಿದ್ದು, ಮಕ್ಕಳನ್ನು ಶಾಲೆಗೆ ಕಳುಹಿಸೋದಕ್ಕೂ ಪೋಷಕರು ಹೆದರುತ್ತಿದ್ದಾರೆ.



