ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಪ್ರಮಾಣ ವರ್ಷದಿಂದ ವರ್ಷಕ್ಕೆ ಗಣನೀಯವಾಗಿ ಕುಸಿಯುತ್ತಿರುವುದಕ್ಕೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಇದು ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತಾತ್ಮಕ ವೈಫಲ್ಯ ಮತ್ತು ದಿವಾಳಿತನಕ್ಕೆ ಸಾಕ್ಷಿ ಎಂದು ಅವರು ತೀವ್ರವಾಗಿ ಕಿಡಿಕಾರಿದ್ದಾರೆ.
ಕೇಂದ್ರ ಸರ್ಕಾರದ ಇತ್ತೀಚಿನ ಯುಡೈಸ್ ಪ್ಲಸ್ (UDISE+) ವರದಿಯನ್ನು ಉಲ್ಲೇಖಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯಿಸಿರುವ ಅವರು, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ದಾಖಲಾತಿ ಕುಸಿತದ ಆತಂಕಕಾರಿ ಅಂಕಿ-ಅಂಶ:
ಕೇಂದ್ರದ ವರದಿಯ ಪ್ರಕಾರ, ಕರ್ನಾಟಕದ ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ನಿರಂತರವಾಗಿ ಕುಸಿಯುತ್ತಿದೆ. ಕಳೆದ 2024-25ರ ಶೈಕ್ಷಣಿಕ ಸಾಲಿನಲ್ಲಿ ದಾಖಲಾತಿಯು ಬರೊಬ್ಬರಿ 1,46,052 ರಷ್ಟು ಭಾರಿ ಕುಸಿತ ಕಂಡಿತ್ತು. ಪ್ರಸಕ್ತ ಸಾಲಿನಲ್ಲೂ ಈ ಇಳಿಮುಖದ ಹಾದಿ ಮುಂದುವರಿದಿದ್ದು, ಮತ್ತೊಮ್ಮೆ ದಾಖಲಾತಿ ಪ್ರಮಾಣ 66,037 ರಷ್ಟು ಕುಸಿದಿದೆ ಎಂದು ಜೋಶಿ ಅಂಕಿ-ಅಂಶಗಳನ್ನು ಬಿಡುಗಡೆ ಮಾಡಿದ್ದಾರೆ.
ಇದನ್ನೂ ಓದಿ:
ಉಚಿತ ಸೌಲಭ್ಯಗಳಿದ್ದರೂ ದಾಖಲಾತಿ ಕುಸಿತ:
ಸರ್ಕಾರಿ ಶಾಲೆಗಳಲ್ಲಿ ಉಚಿತ ಶಿಕ್ಷಣ, ಬಿಸಿಯೂಟ, ಕ್ಷೀರಭಾಗ್ಯ ಹಾಗೂ ಮೊಟ್ಟೆ ವಿತರಣೆಯಂತಹ ಹತ್ತಾರು ಆಕರ್ಷಕ ಯೋಜನೆಗಳಿದ್ದರೂ ಪೋಷಕರು ಸರ್ಕಾರಿ ಶಾಲೆಗಳನ್ನು ಬಿಟ್ಟು ಖಾಸಗಿ ಶಾಲೆಗಳತ್ತ ಮುಖ ಮಾಡುತ್ತಿರುವುದು ಈ ವರದಿಯಿಂದ ಸಾಬೀತಾಗಿದೆ. ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಮತ್ತು ಮೂಲಸೌಕರ್ಯಗಳ ಕೊರತೆಯೇ ಇದಕ್ಕೆ ಮುಖ್ಯ ಕಾರಣ ಎಂದು ಪೋಷಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.



