ಹೊಸದಿಗಂತ ವರದಿ ಶಿವಮೊಗ್ಗ:
ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್ ಹೀಗೆ ಯಾವುದೆ ಚುನಾವಣೆ ಬಂದರೂ ಅದನ್ನು ಸಮರ್ಥವಾಗಿ ಎದುರಿಸಿ ನಮ್ಮ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಗೆಲ್ಲುವಂತೆ ನೋಡಿಕೊಳ್ಳಬೇಕು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಮಾಜಿ ಶಾಸಕಿ, ಶಿವಮೊಗ್ಗ ಜಿಲ್ಲೆ ಸಂಘಟನಾ ಪ್ರಭಾರಿಯಾದ ರೂಪಾಲಿ ಎಸ್.ನಾಯ್ಕ ಕರೆ ನೀಡಿದರು.
ಶನಿವಾರ ನಡೆದ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡು ಅವರು ಪಕ್ಷದ ಸಂಘಟನೆಯ ಕುರಿತು ಮಾತನಾಡಿದರು.
ಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗಾಗಿ, ದೇಶಕ್ಕಾಗಿ ಹಗಲಿರುಳು ದುಡಿಯುತ್ತಿದ್ದಾರೆ. ಪಕ್ಷವನ್ನು ಬಲಪಡಿಸುವ ಮೂಲಕ ಅವರಿಗೆ ನಾವು ಇನ್ನಷ್ಟು ಶಕ್ತಿ ನೀಡಬೇಕು. ನಮ್ಮ ಕೆಲಸವನ್ನು ಶೃದ್ಧೆಯಿಂದ ಮಾಡಬೇಕು. ಯಾವುದೆ ಚುನಾವಣೆ ಬಂದರೂ ಅಭ್ಯರ್ಥಿ ಯಾರೇ ಅದರೂ ಗೊಂದಲಗಳಿಗೆ ಅವಕಾಶ ಇಲ್ಲದಂತೆ ಪಕ್ಷ ಗೆಲ್ಲುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.
ಶಿವಮೊಗ್ಗದಲ್ಲಿ ಪಕ್ಷದ ಸಂಘಟನೆ ಬಲಿಷ್ಠವಾಗಿದೆ. ಅದು ಇನ್ನಷ್ಟು ಗಟ್ಟಿಗೊಳ್ಳಬೇಕು. ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರ, ಬೂತ್ ಮಟ್ಟ ಹೀಗೆ ಪ್ರತಿಯೊಂದು ವಿಭಾಗವೂ ಹೊಸ ಹುಮ್ಮಸ್ಸಿನಲ್ಲಿ ಪಕ್ಷಕ್ಕಾಗಿ ದುಡಿಯಬೇಕು ಎಂದು ತಿಳಿಸಿದರು. ಎಸ್ ಐ ಆರ್ ಪ್ರಕ್ರಿಯೆ ಈಗ ರಾಜ್ಯದಾದ್ಯಂತ ನಡೆಯುತ್ತಿದೆ. ಅದು ಸಮರ್ಪಕವಾಗಿ ಆಗುವಂತೆ ಅರ್ಹರು ಮತದಾನದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕಾದ ಜವಾಬ್ದಾರಿ ನಮ್ಮ ಮೇಲಿದೆ ಎಂದು ಹೇಳಿದರು.
ಇದನ್ನೂ ಓದಿ:
ಪಕ್ಷದ ಶಿವಮೊಗ್ಗ ಜಿಲ್ಲಾಧ್ಯಕ್ಷ ಎನ್,ಕೆ, ಜಗದೀಶ್, ಪ್ರಭಾರಿಗಳಾದ ಸಿದ್ದರಾಮಣ್ಣ, ವಿಧಾನ ಪರಿಷತ್ ಸದಸ್ಯ ಅರುಣ, ರಾಜ್ಯ ಪ್ರಕೋಷ್ಠದ ಸಂಯೋಜಕರು ಹಾಗೂ ಎಸ್,ಆಯ್,ಆರ್, ರಾಜ್ಯ ಪ್ರಮುಖರಾದ ದತ್ತಾತ್ರೇಯ, ವಿಧಾನ ಪರಿಷತ್ ಮಾಜಿ ಸದಸ್ಯರಾದ ಕುಮಾರಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು, ಪದಾಧಿಕಾರಿಗಳು, ಮಂಡಲದ ಅಧ್ಯಕ್ಷರು, ಎಲ್ಲಾ ಮೋರ್ಚಾ ಪದಾಧಿಕಾರಿಗಳು, ಮಂಡಲದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಶಿವಮೊಗ್ಗ ಜಿಲ್ಲೆಯ ಸಂಘಟನಾ ಪ್ರಭಾರಿಯಾಗಿ ನೇಮಕಗೊಂಡ ತರುವಾಯ ಶಿವಮೊಗ್ಗದಲ್ಲಿ ನಡೆದ ಪ್ರಥಮ ಕಾರ್ಯಕಾರಿಣಿಯಲ್ಲಿ ಪಾಲ್ಗೊಂಡ ರೂಪಾಲಿ ಎಸ್.ನಾಯ್ಕ ಅವರನ್ನು ಶಿವಮೊಗ್ಗ ಜಿಲ್ಲಾ ಬಿಜೆಪಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು.



