ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಲಬುರಗಿ ನಗರದ ಹೊರವಲಯದ ಕಲಬುರಗಿ ಕೇಂದ್ರ ಕಾರಾಗೃಹದಿಂದ ಗಂಭೀರ ಅಪರಾಧ ಪ್ರಕರಣಗಳಲ್ಲಿ ಶಿಕ್ಷೆಗೆ ಗುರಿಯಾಗಿದ್ದ ಮೂವರು ಕೈದಿಗಳು ಪರಾರಿಯಾಗಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು, ಪರಾರಿಯಾದ ಕೈದಿಗಳ ಪತ್ತೆಗೆ ಪೊಲೀಸ್ ಇಲಾಖೆ ವ್ಯಾಪಕ ಶೋಧ ಕಾರ್ಯ ಆರಂಭಿಸಿದ್ದು, ಸಾರ್ವಜನಿಕರಿಂದ ಸಹ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ.
ಪರಾರಿಯಾದವರಲ್ಲಿ ಪೋಕ್ಸೋ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿದ್ದ ಮಸ್ತಾನ್ (31), ತಂದೆ ಮಾಣಿಕಪ್ಪ ಕಮಲಾಪುರ, ಇಸ್ಲಾಮಾಪುರ (ತಾ. ಬಸವಕಲ್ಯಾಣ, ಜಿ. ಬೀದರ) ಸೇರಿದ್ದಾರೆ. ಅಲ್ಲದೆ ಕೊಲೆ ಹಾಗೂ ಕೊಲೆ ಯತ್ನ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಂತೋಷ ಮೇತ್ರಿ (28), ಸಂತಪುರ (ತಾ. ಔರಾದ, ಜಿ. ಬೀದರ) ಹಾಗೂ ಸಾಗರ ಹೊಸಮನಿ (30), ಬಕಚೌಡಿ (ಜಿ. ಬೀದರ) ಎಂಬ ಕೈದಿಗಳೂ ಸೇರಿದ್ದಾರೆ.
ಮೂವರು ಕೈದಿಗಳು ಕೇಂದ್ರ ಕಾರಾಗೃಹದಿಂದ ತಪ್ಪಿಸಿಕೊಂಡು ಓಡಿಹೋಗಿರುವ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲು ವಿಶೇಷ ತಂಡಗಳನ್ನು ರಚಿಸಿ ಶೋಧ ಕಾರ್ಯ ನಡೆಸಲಾಗುತ್ತಿದೆ.
ಇದನ್ನೂ ಓದಿ:
ಘಟನೆಯು ಕಾರಾಗೃಹದ ಭದ್ರತಾ ವ್ಯವಸ್ಥೆಯ ಕುರಿತು ಪ್ರಶ್ನೆಗಳನ್ನು ಹುಟ್ಟುಹಾಕಿದ್ದು, ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ.
ಪರಾರಿಯಾದ ಕೈದಿಗಳು ಎಲ್ಲಾದರೂ ಕಂಡುಬಂದಲ್ಲಿ ಅಥವಾ ಅವರ ಬಗ್ಗೆ ಯಾವುದೇ ಮಾಹಿತಿ ದೊರೆತಲ್ಲಿ ತಕ್ಷಣ ಕಲಬುರಗಿ ನಗರ ಪೊಲೀಸ್ ನಿಯಂತ್ರಣ ಕೊಠಡಿಯ ಮೊಬೈಲ್ ಸಂಖ್ಯೆ 9480805500 ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಪೊಲೀಸ್ ಇಲಾಖೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.



