ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಸಂಭವಿಸಿದ ಮಹಾ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. ಸಿನಿಮೀಯ ಶೈಲಿಯಲ್ಲಿ ಮೂವರು ಕೈದಿಗಳು ಜೈಲಿನಿಂದ ಪರಾರಿಯಾದ ಬೆನ್ನಲ್ಲೇ, ಕರ್ತವ್ಯ ಲೋಪದ ಆರೋಪದ ಮೇಲೆ ಒಟ್ಟು 8 ಜೈಲಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಲಾಗಿದೆ.
ಮಂಗಳವಾರ ಮಧ್ಯರಾತ್ರಿ ಹೈಡ್ರಾಮಾ:
ಮಂಗಳವಾರ ಮಧ್ಯರಾತ್ರಿ ಜೈಲಿನ ಕಾವಲುಗಾರರ ಕಣ್ಣು ತಪ್ಪಿಸಿ ಮೂವರು ಕೈದಿಗಳು ಥೇಟ್ ಸಿನಿಮಾ ಮಾದರಿಯಲ್ಲೇ ಜೈಲಿನಿಂದ ಎಸ್ಕೇಪ್ ಆಗಿದ್ದರು. ಬುಧವಾರ ಮುಂಜಾನೆ ಕೈದಿಗಳ ಗಣತಿ ವೇಳೆ ಈ ವಿಷಯ ಬೆಳಕಿಗೆ ಬಂದ ತಕ್ಷಣ ಇಡೀ ಪೊಲೀಸ್ ಇಲಾಖೆ ಅಲರ್ಟ್ ಆಗಿದೆ [2026-07-15]. ಕಾರಾಗೃಹದ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ, ಭದ್ರತೆಯಲ್ಲಿ ನಿರ್ಲಕ್ಷ್ಯ ವಹಿಸಿದ 8 ಸಿಬ್ಬಂದಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಇದನ್ನೂ ಓದಿ:
ಓರ್ವನ ಬಂಧನ, ಡ್ರೋನ್ ಮೂಲಕ ಮುಂದುವರಿದ ಶೋಧ:
ಪರಾರಿಯಾಗಿದ್ದ ಮೂವರು ಕೈದಿಗಳ ಪೈಕಿ ಓರ್ವನನ್ನು ಪೊಲೀಸರು ಬುಧವಾರ ಯಶಸ್ವಿಯಾಗಿ ಪತ್ತೆಹಚ್ಚಿ ಮತ್ತೆ ಬಂಧಿಸಿದ್ದಾರೆ. ಇನ್ನುಳಿದ ಇಬ್ಬರು ಆರೋಪಿಗಳು ಕಲ್ಯಾಣ ಕರ್ನಾಟಕ ಭಾಗದ ದಟ್ಟ ಕಂಟಿ ಅಥವಾ ಗ್ರಾಮೀಣ ಪ್ರದೇಶಗಳಲ್ಲಿ ಅಡಗಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ತಪ್ಪಿಸಿಕೊಂಡ ಇಬ್ಬರು ಕೈದಿಗಳ ಪತ್ತೆಗಾಗಿ ಪೊಲೀಸರು ವಿಶೇಷ ಜಾಲ ಬೀಸಿದ್ದು, ತಲಾಶ್ ನಡೆಸಲು ಅತ್ಯಾಧುನಿಕ ಡ್ರೋನ್ ಕೆಮೆರಾಗಳನ್ನು ಬಳಸುತ್ತಿದ್ದಾರೆ.



