ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದ ಮಹತ್ವದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಉಪಸಭಾಪತಿ ಎಂ.ಕೆ. ಪ್ರಾಣೇಶ್ ಅವರ ಪರಿಷತ್ ಸದಸ್ಯತ್ವವನ್ನು ರದ್ದುಗೊಳಿಸಿದೆ.
ಅರ್ಜಿ ವಜಾ, ತೀರ್ಪು ಎತ್ತಿಹಿಡಿದ ಸುಪ್ರೀಂ
ಸ್ಥಳೀಯ ಸಂಸ್ಥೆಗಳ ನಾಮನಿರ್ದೇಶಿತ ಸದಸ್ಯರ ಮತದಾನದ ಹಕ್ಕು ಕುರಿತು ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಪ್ರಾಣೇಶ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಹೀಗಾಗಿ ಹೈಕೋರ್ಟ್ನ ತೀರ್ಪು ಯಥಾಸ್ಥಿತಿಯಲ್ಲಿ ಮುಂದುವರಿದಿದೆ.
ಚುನಾವಣೆ ಫಲಿತಾಂಶಕ್ಕೆ ತಿರುವು
2021ರ ಚುನಾವಣೆಯಲ್ಲಿ ಪ್ರಾಣೇಶ್ ಕೇವಲ ಆರು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಆದರೆ ಮತದಾನದ ಹಕ್ಕಿಲ್ಲದ ನಾಮನಿರ್ದೇಶಿತ ಸದಸ್ಯರು ಮತ ಚಲಾಯಿಸಿರುವುದನ್ನು ಪ್ರಶ್ನಿಸಿ ಗಾಯತ್ರಿ ಶಾಂತೇಗೌಡ ನ್ಯಾಯಾಲಯದ ಮೊರೆ ಹೋಗಿದ್ದರು. ಇದೀಗ ಸುಪ್ರೀಂ ಕೋರ್ಟ್ ತೀರ್ಪಿನಿಂದ ಪ್ರಕರಣಕ್ಕೆ ಅಂತಿಮ ಮುದ್ರೆ ಬಿದ್ದಿದೆ.



