ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದಲ್ಲಿ ತಲೆದೋರಿರುವ ಭೀಕರ ಬರ ಪರಿಸ್ಥಿತಿಯನ್ನು ಎದುರಿಸಲು ಕೇಂದ್ರ ಸರ್ಕಾರ ತಕ್ಷಣವೇ ಆರ್ಥಿಕ ನೆರವು ನೀಡಬೇಕು ಎಂದು ಒತ್ತಾಯಿಸಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಮುಖ್ಯಮಂತ್ರಿಗಳು ಈಗಾಗಲೇ ಕೇಂದ್ರಕ್ಕೆ ಮನವಿ ಸಲ್ಲಿಸಿದ ಬೆನ್ನಲ್ಲೇ, ಡಿಸಿಎಂ ಕೂಡ ವಿಶೇಷ ಅನುದಾನಕ್ಕಾಗಿ ಪ್ರತ್ಯೇಕ ಪತ್ರದ ಮೂಲಕ ಮನವಿ ಮಾಡಿದ್ದಾರೆ.
ಎನ್ಡಿಆರ್ಎಫ್ ಮುಂಗಡ ಹಣಕ್ಕೆ ಒತ್ತಾಯ:
ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (NDRF) ಅಡಿಯಲ್ಲಿ ರಾಜ್ಯಕ್ಕೆ ಸಿಗಬೇಕಾದ ಮುಂಗಡ ಪರಿಹಾರ ಹಣವನ್ನು ತಕ್ಷಣವೇ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಬೇಕೆಂದು ಡಿಸಿಎಂ ಪತ್ರದಲ್ಲಿ ಆಗ್ರಹಿಸಿದ್ದಾರೆ. ಬರಗಾಲದ ತೀವ್ರತೆಯಿಂದಾಗಿ ರಾಜ್ಯದ ರೈತರು ಮತ್ತು ಸಾರ್ವಜನಿಕರು ತತ್ತರಿಸುತ್ತಿದ್ದು, ಪರಿಸ್ಥಿತಿಯನ್ನು ನಿಭಾಯಿಸಲು ಕೇಂದ್ರ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಕೋರಿದ್ದಾರೆ.
ಕೇಂದ್ರ ಸಚಿವರಿಗೂ ಪತ್ರ:
ಪ್ರಧಾನಿ ಮೋದಿ ಮಾತ್ರವಲ್ಲದೆ, ಕೇಂದ್ರ ಗೃಹ ಸಚಿವರು ಹಾಗೂ ಕೃಷಿ ಸಚಿವರಿಗೂ ಡಿಸಿಎಂ ಪರಮೇಶ್ವರ್ ಪತ್ರ ಬರೆದಿದ್ದು, ರಾಜ್ಯದ ಸ್ಥಿತಿಗತಿಯನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ.
ಇದನ್ನೂ ಓದಿ:
ಕೃಷಿ ವಲಯ ಹಾಗೂ ಕುಡಿಯುವ ನೀರಿಗೆ ಆಸರೆ
ಮುಂಗಾರು ಮಳೆಯ ಅಭಾವದಿಂದಾಗಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬೆಳೆ ಒಣಗುತ್ತಿದ್ದು, ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೇಂದ್ರದಿಂದ ಬರುವ ಪರಿಹಾರ ಧನವನ್ನು ಕುಡಿಯುವ ನೀರಿನ ಪೂರೈಕೆ, ಜಾನುವಾರುಗಳ ಮೇವಿನ ಬ್ಯಾಂಕ್ ಸ್ಥಾಪನೆ ಹಾಗೂ ರೈತರ ಬೆಳೆ ನಷ್ಟ ಪರಿಹಾರಕ್ಕೆ ಆದ್ಯತೆಯ ಮೇರೆಗೆ ಬಳಸಿಕೊಳ್ಳಲು ರಾಜ್ಯ ಸರ್ಕಾರ ಯೋಜನೆ ರೂಪಿಸಿದೆ.



