ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಧರ್ಮಪತ್ನಿ ಚೆನ್ನಮ್ಮ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ. ತಾಯಿಯ ಅನಾರೋಗ್ಯದ ಸುದ್ದಿ ತಿಳಿಯುತ್ತಿದ್ದಂತೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆಸ್ಪತ್ರೆಗೆ ಧಾವಿಸಿದ್ದಾರೆ.
ಕಳೆದ ಮೂರು ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ:
ಜುಲೈ 15ರ ಬುಧವಾರ ಸಂಜೆ ಚೆನ್ನಮ್ಮ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರಾಗಿತ್ತು. ತಕ್ಷಣವೇ ಅವರನ್ನು ಬೆಂಗಳೂರಿನ ಓಲ್ಡ್ ಏರ್ಪೋರ್ಟ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಐಸಿಯುನಲ್ಲಿ ಇಟ್ಟು ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಸದ್ಯ ಅವರ ಪರಿಸ್ಥಿತಿ ಗಂಭೀರವಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.
ಇದನ್ನೂ ಓದಿ:
ಆಸ್ಪತ್ರೆಗೆ ಧಾವಿಸಿದ ದೊಡ್ಡಗೌಡರ ಕುಟುಂಬ:
ತಾಯಿಯ ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಸೇರಿದಂತೆ ಕುಟುಂಬದ ಬಹುತೇಕ ಎಲ್ಲಾ ಸದಸ್ಯರು ಆಸ್ಪತ್ರೆಗೆ ಆಗಮಿಸಿದ್ದಾರೆ. ಆಸ್ಪತ್ರೆಯ ಹಿರಿಯ ವೈದ್ಯರೊಂದಿಗೆ ಸಮಾಲೋಚನೆ ನಡೆಸಿರುವ ಹೆಚ್.ಡಿ.ಕುಮಾರಸ್ವಾಮಿ, ಚೆನ್ನಮ್ಮಗೆ ನೀಡಲಾಗುತ್ತಿರುವ ಚಿಕಿತ್ಸೆ ಹಾಗೂ ಸದ್ಯದ ಆರೋಗ್ಯ ಸ್ಥಿತಿಯ ಕಂಪ್ಲೀಟ್ ಮಾಹಿತಿಯನ್ನು ಪಡೆದುಕೊಂಡಿದ್ದಾರೆ.
ದೇವಗೌಡರ ಧರ್ಮಪತ್ನಿ ಚೆನ್ನಮ್ಮ ಶೀಘ್ರವಾಗಿ ಗುಣಮುಖರಾಗಲಿ ಎಂದು ಜೆಡಿಎಸ್ ಪಕ್ಷದ ನಾಯಕರು, ಅಭಿಮಾನಿಗಳು ಹಾಗೂ ಕುಟುಂಬಸ್ಥರು ವಿಶೇಷ ಪ್ರಾರ್ಥನೆಗಳನ್ನು ಸಲ್ಲಿಸುತ್ತಿದ್ದಾರೆ.



