ಹೊಸದಿಗಂತ ವರದಿ ಕಲಬುರಗಿ:
ಕಲಬುರಗಿ: ಜಿಲ್ಲೆಯ ವಾಡಿ ರೈಲ್ವೆ ನಿಲ್ದಾಣದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್)ದ ಸರಸಂಘಚಾಲಕ ಮೋಹನ್ ಭಾಗವತ್ ಅವರಿಗೆ ವಾಡಿ ರೈಲು ನಿಲ್ದಾಣದಲ್ಲಿ ಸಂಘದ ಹಾಗೂ ಬಿಜೆಪಿ ಕಾರ್ಯಕರ್ತರು ಅದ್ದೂರಿ ಸ್ವಾಗತ ಕೋರಿದರು.
ಗುರುವಾರ ಸಂಜೆ ಉದ್ಯಾನ್ ಎಕ್ಸ್ಪ್ರೆಸ್ ರೈಲಿನ ಮೂಲಕ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ವೇಳೆ ವಾಡಿ ರೈಲು ನಿಲ್ದಾಣದಲ್ಲಿ ರೈಲು ನಿಂತಾಗ ಭಾಗವತ್ ಅವರನ್ನು ಭೇಟಿ ಮಾಡಲು ನೂರಾರು ಕಾರ್ಯಕರ್ತರು, ಮುಖಂಡರು ಹಾಗೂ ಅಭಿಮಾನಿಗಳು ಜಮಾಯಿಸಿದ್ದರು. ಈ ವೇಳೆ ಭಾರತ ಮಾತೆ ಕೀ ಜೈ”, “ಜೈ ಶ್ರೀರಾಮ್” ಸೇರಿದಂತೆ ವಿವಿಧ ಘೋಷಣೆಗಳಿಂದ ನಿಲ್ದಾಣ ಮೊಳಗಿತು.
ವಾಡಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ವೀರಣ್ಣ ಯಾರಿ ಅವರು ಚಕ್ರವರ್ತಿ ಸೂಲಿಬೆಲೆ ರಚಿಸಿರುವ ಅಪ್ರತಿಮ ದೇಶಭಕ್ತ ಸ್ವಾತಂತ್ರ್ಯ ವೀರ ಸಾವರ್ಕರ್ ಕೃತಿಯನ್ನು ಮೋಹನ್ ಭಾಗವತ್ ಅವರಿಗೆ ನೀಡಿ ಗೌರವಿಸಿದರು.
ರೈಲಿನ ದ್ವಾರದಲ್ಲೇ ನಿಂತು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಭಾಗವತ್ ಅವರು,ಸಂಘಟನೆಯೇ ನಿಜವಾದ ಸ್ವಾಭಿಮಾನದ ಸಂಪತ್ತು. ಸಮಾಜದ ಹಿತಕ್ಕಾಗಿ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಇದನ್ನೂ ಓದಿ:
ಭಾಗವತ್ ಅವರ ಆಗಮನದಿಂದ ವಾಡಿ ರೈಲು ನಿಲ್ದಾಣದಲ್ಲಿ ಕೆಲಕಾಲ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ಅವರನ್ನು ಕಣ್ತುಂಬಿಕೊಳ್ಳಲು ಕಾರ್ಯಕರ್ತರು ಮುಗಿಬಿದ್ದರು.
ಈ ಸಂದರ್ಭದಲ್ಲಿ ಬಿಜೆಪಿ ಹಾಗೂ ಸಂಘದ ಹಲವಾರು ಮುಖಂಡರು ಉಪಸ್ಥಿತರಿದ್ದರು.



