July 21, 2026
Tuesday, July 21, 2026
spot_img

ಮುಖ್ಯಮಂತ್ರಿ ಪ್ರವಾಸದಲ್ಲಿ ವೈದ್ಯಕೀಯ ಭದ್ರತಾ ಲೋಪ ಆರೋಪ: ಡಿಎಚ್‌ಒಗೆ ಶೋಕಾಸ್ ನೋಟಿಸ್

ಹೊಸದಿಗಂತ ವರದಿ ಬೆಳಗಾವಿ:

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಇತ್ತೀಚಿನ ಬೆಳಗಾವಿ ಜಿಲ್ಲಾ ಪ್ರವಾಸದ ವೇಳೆ ವೈದ್ಯಕೀಯ ಭದ್ರತೆ ಹಾಗೂ ವಿಐಪಿ ಶಿಷ್ಟಾಚಾರ ಪಾಲನೆಯಲ್ಲಿ ಗಂಭೀರ ಲೋಪಗಳು ನಡೆದಿರುವ ಆರೋಪದ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (ಡಿಎಚ್‌ಒ) ಡಾ. ಈಶ್ವರ ಗಡಾದ ಅವರಿಗೆ ಜಿಲ್ಲಾಡಳಿತ ಶೋಕಾಸ್ ನೋಟಿಸ್ ಜಾರಿ ಮಾಡಿದೆ.

ಜುಲೈ 9ರಂದು ಬೆಳಗಾವಿಯಲ್ಲಿ ನಡೆದ ವಿಭಾಗೀಯ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಆಗಮಿಸಿದ್ದ ವೇಳೆ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಕೈಗೊಳ್ಳಬೇಕಿದ್ದ ವೈದ್ಯಕೀಯ ಭದ್ರತಾ ಕ್ರಮಗಳಲ್ಲಿ ನಿರ್ಲಕ್ಷ್ಯ ಕಂಡುಬಂದಿದೆ ಎಂದು ಪರಿಶೀಲನೆಯಲ್ಲಿ ತಿಳಿದುಬಂದಿದೆ.

ನಿಯಮಾವಳಿಗಳ ಪ್ರಕಾರ ಮುಖ್ಯಮಂತ್ರಿ ಪ್ರವಾಸದ ಸಂದರ್ಭದಲ್ಲಿ ಅತ್ಯಾಧುನಿಕ ಜೀವರಕ್ಷಕ ಉಪಕರಣಗಳನ್ನು ಹೊಂದಿರುವ ಎಡ್ವಾನ್ಸ್ಡ್ ಲೈಫ್ ಸಪೋರ್ಟ್ (ALS) ಅಂಬುಲೆನ್ಸ್ ಹಾಗೂ ತಜ್ಞ ವೈದ್ಯರ ತಂಡವನ್ನು ಕಡ್ಡಾಯವಾಗಿ ನಿಯೋಜಿಸಬೇಕಾಗಿತ್ತು. ಆದರೆ, ಸಾಮಾನ್ಯ ಅಂಬುಲೆನ್ಸ್‌ನ್ನು ಮಾತ್ರ ನಿಯೋಜಿಸಿರುವುದು ಮುಖ್ಯಮಂತ್ರಿಗಳ ಆರೋಗ್ಯ ಭದ್ರತೆಯಲ್ಲಿ ಗಂಭೀರ ನಿರ್ಲಕ್ಷ್ಯ ಎಂದು ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ.

ಇದಲ್ಲದೆ, ಮುಖ್ಯಮಂತ್ರಿ ತಂಗಿದ್ದ ಸ್ಥಳದಲ್ಲಿ ಹಿರಿಯ ತಜ್ಞ ವೈದ್ಯರನ್ನು ನಿಯೋಜಿಸುವ ಬದಲು ವೈದ್ಯಕೀಯ ಸ್ನಾತಕೋತ್ತರ (ಪಿಜಿ) ವಿದ್ಯಾರ್ಥಿಗಳನ್ನು ಕರ್ತವ್ಯಕ್ಕೆ ನಿಯೋಜಿಸುವ ಮೂಲಕ ವಿಐಪಿ ಪ್ರೋಟೋಕಾಲ್ ಉಲ್ಲಂಘಿಸಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ.

ಪ್ರವಾಸದ ಅವಧಿಯಲ್ಲಿ ವೈದ್ಯಕೀಯ ತಂಡದೊಂದಿಗೆ ನಿರಂತರ ಸಂಪರ್ಕದಲ್ಲಿರದೆ, ಜಿಲ್ಲಾಡಳಿತದೊಂದಿಗೆ ಸಮರ್ಪಕ ಸಮನ್ವಯ ಸಾಧಿಸದಿರುವುದೂ ಡಿಎಚ್‌ಒ ವಿರುದ್ಧದ ಪ್ರಮುಖ ಆರೋಪಗಳಲ್ಲಿ ಒಂದಾಗಿದೆ.
ಈ ಹಿನ್ನೆಲೆಯಲ್ಲಿ ಡಾ. ಈಶ್ವರ ಗಡಾದ ಅವರಿಗೆ ನೀಡಿರುವ ಶೋಕಾಸ್ ನೋಟಿಸ್‌ಗೆ ಏಳು ದಿನಗಳೊಳಗೆ ಸಮರ್ಪಕ ಲಿಖಿತ ವಿವರಣೆ ಸಲ್ಲಿಸುವಂತೆ ಸೂಚಿಸಲಾಗಿದೆ. ನಿಗದಿತ ಅವಧಿಯಲ್ಲಿ ಸಮರ್ಪಕ ಉತ್ತರ ನೀಡದಿದ್ದಲ್ಲಿ ಸೇವೆಯಿಂದ ಅಮಾನತು ಸೇರಿದಂತೆ ಕಠಿಣ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !