ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ–ಅಮೆರಿಕ ಪ್ರಸ್ತಾವಿತ ವ್ಯಾಪಾರ ಒಪ್ಪಂದವನ್ನು ವಿರೋಧಿಸಿ ರೈತ ಸಂಘಟನೆಗಳು ದೆಹಲಿಯ ಕಿಸಾನ್ ಘಾಟ್ನಲ್ಲಿ ಆಯೋಜಿಸಿರುವ ಮಹಾಪಂಚಾಯತ್ ಹಿನ್ನೆಲೆಯಲ್ಲಿ ಹರಿಯಾಣ ಪೊಲೀಸರು ಭದ್ರತೆ ಹೆಚ್ಚಿಸಿದ್ದಾರೆ. ಹರಿಯಾಣ–ಪಂಜಾಬ್ ಗಡಿಯ ಶಂಭು ಪ್ರದೇಶವನ್ನು ಬಂದ್ ಮಾಡಲಾಗಿದ್ದು, ಹಲವು ರೈತ ಮುಖಂಡರನ್ನು ವಶಕ್ಕೆ ಪಡೆಯಲಾಗಿದೆ.
ಗಡಿಯಲ್ಲಿ ಭಾರೀ ಭದ್ರತೆ
ಶಂಭು ಗಡಿಯಲ್ಲಿ ಅರೆಸೇನಾ ಪಡೆ ಸೇರಿದಂತೆ ಸುಮಾರು 15 ಭದ್ರತಾ ಪಡೆಗಳ ತಂಡಗಳನ್ನು ನಿಯೋಜಿಸಲಾಗಿದೆ. ದೆಹಲಿಯತ್ತ ತೆರಳಲು ರೈತರು ಜಮಾಯಿಸಿದ್ದ ಹಿನ್ನೆಲೆಯಲ್ಲಿ ಪೊಲೀಸರು ಹಲವು ಬ್ಯಾರಿಕೇಡ್ಗಳನ್ನು ಅಳವಡಿಸಿ, ಘಗ್ಗರ್ ನದಿ ಸೇತುವೆ ಮೇಲೆ ಸಿಮೆಂಟ್ ತಡೆಗೋಡೆಗಳನ್ನು ನಿರ್ಮಿಸಿದ್ದಾರೆ.
ರೈತರ ದೆಹಲಿ ಚಲೋಗೆ ತಡೆ
ಪ್ರತಿಭಟನಾಕಾರರ ಸಂಚಾರ ನಿಯಂತ್ರಿಸಲು ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದೆ. ದೆಹಲಿ ಮತ್ತು ಪಂಜಾಬ್ ನಡುವೆ ಸಂಚರಿಸುವ ವಾಹನ ಸವಾರರಿಗೆ ಬೇರೆ ಮಾರ್ಗಗಳನ್ನು ಬಳಸುವಂತೆ ಪೊಲೀಸರು ಸಲಹೆ ನೀಡಿದ್ದಾರೆ.
ಇದನ್ನೂ ಓದಿ:
ರೈತ ಸಂಘಟನೆಗಳ ಆಕ್ರೋಶ
ಶಾಂತಿಯುತ ಪ್ರತಿಭಟನೆ ನಡೆಸುವ ಹಕ್ಕನ್ನು ಸರ್ಕಾರ ತಡೆಯುತ್ತಿದೆ ಎಂದು ರೈತ ಮುಖಂಡರು ಆರೋಪಿಸಿದ್ದಾರೆ. ಮಹಾಪಂಚಾಯತ್ನಲ್ಲಿ ಭಾಗವಹಿಸದಂತೆ ಹಲವು ರೈತ ನಾಯಕರು ಮತ್ತು ಕಾರ್ಯಕರ್ತರನ್ನು ಮುಂಚಿತವಾಗಿ ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ವ್ಯಾಪಾರ ಒಪ್ಪಂದಕ್ಕೆ ವಿರೋಧ
ಭಾರತ–ಅಮೆರಿಕ ವ್ಯಾಪಾರ ಒಪ್ಪಂದವು ರೈತರು, ಕಾರ್ಮಿಕರು, ಸಣ್ಣ ವ್ಯಾಪಾರಿಗಳು ಮತ್ತು ಯುವಕರ ಹಿತಾಸಕ್ತಿಗೆ ಧಕ್ಕೆ ತರಬಹುದು ಎಂದು ರೈತ ಸಂಘಟನೆಗಳು ಅಭಿಪ್ರಾಯಪಟ್ಟಿವೆ. ಈ ಹೋರಾಟ ಕೇವಲ ರೈತರ ಸಮಸ್ಯೆಯಲ್ಲ, ದೇಶದ ಆರ್ಥಿಕ ಹಿತಾಸಕ್ತಿಗೆ ಸಂಬಂಧಿಸಿದ ವಿಚಾರವಾಗಿದೆ ಎಂದು ಮುಖಂಡರು ತಿಳಿಸಿದ್ದಾರೆ.



