ಹೊಸದಿಗಂತ ವರದಿ ಚಿತ್ರದುರ್ಗ
ಜಿಲ್ಲಾ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಲು 10 ರಿಂದ 15 ಸಾವಿರದವರೆಗೆ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಗಂಭೀರ ಆರೋಪ ಕೆಡಿಪಿ ಸಭೆಯಲ್ಲಿ ಕೇಳಿಬಂದಿತು. ಈ ಹಿನ್ನೆಲೆಯಲ್ಲಿ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಜಿಲ್ಲಾ ಸರ್ಜನ್ ಡಾ. ರವೀಂದ್ರರನ್ನು ಸಭೆಗೆ ಕರೆಸಿ ಮಾಹಿತಿ ಪಡೆದು ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.
ನಗರದ ಜಿ.ಪಂ. ಸಭಾಂಗಣದಲ್ಲಿ ಮಂಗಳವಾರ ನಡೆಸಿದ ತಾಲೂಕು ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಲು ಹಣ ಪಡೆಯುವುದು, ಹಣ ಕೊಟ್ಟವರಿಗೆ ಮಾತ್ರ ತುರ್ತು ಚಿಕಿತ್ಸೆ ಹಾಗೂ ಬಿಪಿಎಲ್ ಕಾರ್ಡ್ ಇರುವರಿಗೆ ಎಂಆರ್ಐ ಸ್ಕ್ಯಾನಿಂಗ್ಗೆ ಆದ್ಯತೆ ನೀಡುವುದು ಅತ್ಯಂತ ಗಂಭೀರ ವಿಷಯ. ಬಡವರಿಗೆ ಸೇವೆ ಮಾಡಬೇಕೆನ್ನುವ ಮನೋಭಾವನೆಯನ್ನು ಜಿಲ್ಲಾ ಸರ್ಜನ್ ವೃತ್ತಿಯಲ್ಲಿರುವವರು ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾ ಸರ್ಜನ್ ವೈದ್ಯಾಧಿಕಾರಿ ಡಾ.ರವೀಂದ್ರ ಅವರಿಗೆ ಸೂವಿಸಿದರು.
ನೀರಿನ ಸಮಸ್ಯೆ ಬಗೆಹರಿಸಲು ಸೂಚನೆ
ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಹಲವಾರು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಮುಂದುವರಿದಿದ್ದು, ಅಧಿಕಾರಿಗಳು ಜನರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಸಮಸ್ಯೆ ಪರಿಹರಿಸಬೇಕು ಹಾಗೂ ಗ್ರಾಮಗಳಲ್ಲಿ ಚಾಲ್ತಿಯಲ್ಲಿರುವ ಬೋರ್ವೆಲ್ಗಳಿಗೆ ನಿರಂತರ ಜ್ಯೋತಿ ವಿದ್ಯುತ್ ಸಂಪರ್ಕ ಬೆಸ್ಕಾಂ ಇಲಾಖೆ ಅಧಿಕಾರಿಗಳು ಕಲ್ಪಿಸಿಕೊಡಬೇಕು ಜೊತೆಗೆ ಗ್ರಾಮ ಪಂಚಾಯಿತಿ ಅಧಿಕಾರಿಗಳ ಜೊತೆಗೆ ಜನರಿಗೆ ಕುಡಿಯುವ ನೀರಿನ ಸಮಸ್ಯೆಗೆ ವಿದ್ಯುತ್ ಸಮಸ್ಯೆ ಎದುರಾಗದಂತೆ ಕ್ರಮವಹಿಸಬೇಕು ಜೊತೆಗೆ, ಶುದ್ಧ ಕುಡಿಯುವ ನೀರಿನ ಘಟಕಗಳ ಅವಶ್ಯಕತೆ ಇರುವ ಗ್ರಾಮಗಳ ವರದಿ ನೀಡಿದರೆ ಡಿಎಂಎಫ್ ಯೋಜನೆಯಡಿ ಹೊಸ ಘಟಕಗಳನ್ನು ಸ್ಥಾಪಿಸುವುದಾಗಿ ತಿಳಿಸಿದರು.
ಜಲ ಜೀವನ್ ಮಿಷನ್ (ಜೆಜೆಎಂ) ಕಾಮಗಾರಿಗಳಲ್ಲಿ ನಿರ್ಲಕ್ಷ್ಯ ವಹಿಸಿರುವ ಗುತ್ತಿಗೆದಾರರಿಗೆ ನೋಟಿಸ್ ನೀಡಬೇಕು. ಕಾಮಗಾರಿ ಪೂರ್ಣಗೊಳ್ಳದ ಗ್ರಾಮಗಳ ಪಟ್ಟಿ ಸಿದ್ಧಪಡಿಸಿ, ಕಳಪೆ ಕಾಮಗಾರಿಯನ್ನು ಮಾಡಿರುವಂತಹ ಗುತ್ತಿಗೆಗಾರರ ಬಿಲ್ ಪಾವತಿಸಬಾರದು ಎಂದು ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಶಿವಮೂರ್ತಿ ಅವರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಇದನ್ನೂ ಓದಿ:
ಇದೇ ವೇಳೆ ತೋಟಗಾರಿಕೆ, ಮೀನುಗಾರಿಕೆ, ರೇಷ್ಮೆ, ನಿರ್ಮಿತಿ ಕೇಂದ್ರ, ಸಮಾಜ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಆಹಾರ ಇಲಾಖೆ ಅಕ್ಷರದ ದಾಸೋಹ, ಪಿಆರ್ಇಡಿ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲಿಸಿ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ತಾ.ಪಂ. ಆಡಳಿತ ಅಧಿಕಾರಿ ಮಂಜುನಾಥಸ್ವಾಮಿ, ಜಿಲ್ಲಾ ಗ್ಯಾರೆಂಟಿ ಸಮಿತಿ ಜಿಲ್ಲಾಧ್ಯಕ್ಷ ಶಿವಣ್ಣ, ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಪ್ರಕಾಶ್, ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ರವಿಕುಮಾರ್, ತಹಶೀಲ್ದಾರ್ ಗೋವಿಂದ್ ರಾಜ್, ಕೆಡಿಪಿ ಸದಸ್ಯರಾದ ನಾಗರಾಜ್, ಸಂತೋಷ್, ವಿಜಯ್ ಕುಮಾರ್ ಹಾಜರಿದ್ದರು.



