ಹೊಸದಿಗಂತ ವರದಿ ಚಿತ್ರದುರ್ಗ:
ವಿವಿಧ ಅಭಿವೃದ್ಧಿ ನಿಗಮ ಹಾಗೂ ಮಂಡಳಿಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ನೀಡಿದ ಎಸ್.ಸಿ.ಪಿ. ಮತ್ತು ಟಿ.ಎಸ್.ಪಿ. ಅನುದಾನ ಬಳಕೆ ಪರಿಶೀಲನೆಗೆ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರನ್ನು ಒಳಗೊಂಡ ಜಿಲ್ಲಾ ಮಟ್ಟದ ಸಮಿತಿ ರಚನೆ ಮಾಡುವುದಾಗಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ತ್ರೈಮಾಸಿಕ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೊಳಗೇರಿ ಅಭಿವೃದ್ದಿ ಮಂಡಳಿ ಸೇರಿದಂತೆ ಹಲವು ನಿಗಮ ಮಂಡಳಿಗಳಲ್ಲಿ ಸರ್ಕಾರಿ ನಿಯಮಗಳನ್ನು ಸರಿಯಾಗಿ ಪಾಲಿಸದೇ, ಎಸ್.ಸಿ.ಪಿ ಮತ್ತು ಟಿ.ಎಸ್.ಪಿ. ಅನುದಾವನ್ನು ಬಳಸಲಾಗುತ್ತಿದೆ ಎಂದು ದೂರುಗಳು ಕೇಳಿಬರುತ್ತಿವೆ. ಈ ಹಿನ್ನಲೆಯಲ್ಲಿ ಅನುದಾನ ಬಳಕೆ ಪರಿಶೀಲನೆ ಜಿಲ್ಲಾ ಮಟ್ಟದ ಅಧಿಕಾರಿ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗುವುದು. ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರು ಪರಿಶೀಲನಾ ಭಾಗವಾಗಿದ್ದು, ದೂರುಗಳನ್ನು ಆಧರಿಸಿ ಪರಿಶೀಲನೆ ನಡೆಸಲಿದ್ದಾರೆ. ಈ ವೇಳೆ ಅನುದಾನದ ದುರ್ಬಳಕೆಯಾಗಿರುವುದು ಖಚಿತವಾದರೆ ಅಂತಹ ಅಧಿಕಾರಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.
ಕೊಳಗೇರಿ ಅಭಿವೃದ್ದಿ ಮಂಡಳಿ ಅಧಿಕಾರಿಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರ ಮನೆಗಳಿಗೆ ಸರ್ಕಾರದಿಂದ ನೀಡಿದ ಎಸ್.ಸಿ.ಪಿ. ಮತ್ತು ಟಿ.ಎಸ್.ಪಿ. ಅನುದಾನ ದುರ್ಬಬಳಕೆ ಮಾಡಿಕೊಂಡಿದ್ದಾರೆ. ಆದ್ದರಿಂದ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ದ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಜಾಗೃತಿ ಸಮಿತಿ ಸದಸ್ಯರು ಸಭೆಯಲ್ಲಿ ಒತ್ತಾಯಿಸಿದರು.
ಕುಂದು ಕೊರತೆ ಸಭೆ ನಡೆಸಲು ತಾಕೀತು:
ದೌರ್ಜನ್ಯ ತಡೆ ಕಾಯ್ದೆ ಕುರಿತು ಜಾಗೃತಿ ಹಾಗೂ ಸಂತ್ರಸ್ತರು ಕುಂದು ಕೊರತೆಗಳನ್ನು ಸಲ್ಲಿಸಲು ಅನುವಾಗುವಂತೆ, ತಾಲ್ಲೂಕು ಮಟ್ಟದಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಕುಂದು ಕೊರತೆ ಸಭೆಗಳನ್ನು ನಡೆಸಬೇಕು. ಸಾರ್ವಜನಿಕರ ಸಮಸ್ಯೆಗಳನ್ನು ಅಧಿಕಾರಿಗಳು ಪ್ರಾಥಮಿಕ ಹಂತದಲ್ಲಿ ಗುರುತಿಸಿ ಪರಿಹರಿಸಿದರೆ ಜಿಲ್ಲಾ ಮಟ್ಟಕ್ಕೆ ಬರುವ ದೂರುಗಳ ಸಂಖ್ಯೆ ಕಡಿಮೆಯಾಗಲಿದೆ. ತಪ್ಪದೇ ಸಭೆ ನಡೆಸಿ ಸಭೆಯ ನಡಾವಳಿ ಹಾಗೂ ಜಿ.ಪಿ.ಎಸ್ ಆಧಾರಿತ ಫೋಟೋಗಳನ್ನು ಜಿಲ್ಲಾ ಮಟ್ಟದ ಸಮಿತಿಗೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಾಕೀತು ಮಾಡಿದರು.
ಇದರೊಂದಿಗೆ ನಗರ ಮತ್ತು ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ಆಯಾ ಠಾಣಾಧಿಕಾರಿಗಳು ಪ್ರತಿ ೧೫ ದಿನಗಳಿಗೆ ಒಮ್ಮೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕುಂದು ಕೊರತೆಗಳನ್ನು ಕಡ್ಡಾಯವಾಗಿ ಮಾಡಬೇಕು ಎಂದು ಸೂಚಿಸಿದರು.
ಇದನ್ನೂ ಓದಿ:
ಹೆಚ್ಚಿನ ಅನುದಾನ ಕೋರಿ ಪತ್ರ :
ಇತರೆ ಜಿಲ್ಲೆಗೆ ಹೋಲಿಸಿದರೆ ಚಿತ್ರದುರ್ಗ ಎಸ್.ಸಿ ಹಾಗೂ ಎಸ್.ಟಿ ಜನಸಂಖ್ಯೆ ಹೆಚ್ಚಿದೆ. 2011ರ ಗಣತಿಯಲ್ಲಿ ಎಸ್.ಸಿ ಹಾಗೂ ಎಸ್.ಟಿ ಜನಸಂಖ್ಯೆ ಶೇ.42 ರಷ್ಟಿತ್ತು, ಸದ್ಯ ಈ ಪ್ರಮಾಣ ಇನ್ನೂ ಹೆಚ್ಚಾಗಿದೆ. ಇದರ ಆಧಾರದಲ್ಲಿ ಜಿಲ್ಲೆಗೆ ಹೆಚ್ಚಿನ ಅನುದಾನ ಕೋರಿ ಸರ್ಕಾರಕ್ಕೆ ಪತ್ರ ಬರೆಯಲಾಗುವುದು. ಗಂಗಾಕಲ್ಯಾಣ, ಉದ್ಯೋಗ ಸಾಲ ಯೋಜನೆ, ಮನೆ ಹಂಚಿಕೆ, ಭೂ ಒಡೆತನ, ಪ್ರತಿಷ್ಠತ ಶಾಲೆ ಸೇರ್ಪಡೆ ಸೇರಿದಂತೆ ಗುರಿ ನಿರ್ಧಾರಿತ ಕಾರ್ಯಕ್ರಮಗಳಲ್ಲಿ ಫಲಾನುಭವಿಗಳ ಆಯ್ಕೆ ಸಂಖ್ಯೆ ಹೆಚ್ಚಳ ಮಾಡಲು ಕೋರಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.
ಜಿ.ಪಂ ಸಿಇಓ ಡಾ.ಎಸ್.ಆಕಾಶ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್, ಜಿ.ಪಂ ಸಿಪಿಓ ಗಾಯಿತ್ರಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾದ ಬಿ.ರಾಜಪ್ಪ, ಟಿ.ಡಿ.ರಾಜಗಿರಿ, ಮುದ್ದಪ್ಪ.ವೈ, ಪ್ರಶಾಂತ್ ಕುಮಾರ್, ಟಿ.ರವೀಂದ್ರ, ಹೇಮೇಗೌಡ, ಜಿ.ಪಿ.ರವಿಶಂಕರ್, ಎಂ.ರಾಜಣ್ಣ, ಓಂಕಾರ ಮೂರ್ತಿ, ಅರುಣ್ ಕುಮಾರ್, ಅವಿನಾಶ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿರಿದ್ದರು.



