ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಿವಾಜಿನಗರದಲ್ಲಿ ಕರ್ತವ್ಯ ನಿರತ ಜಿಬಿಎ (ಗ್ರೇಟರ್ ಬೆಂಗಳೂರು ಪ್ರಾಧಿಕಾರ) ಅಧಿಕಾರಿಗಳ ಹಾಗೂ ಸಿಬ್ಬಂದಿಯ ಮೇಲೆ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಮರ್ಷಿಯಲ್ ಸ್ಟ್ರೀಟ್ ಠಾಣೆ ಪೊಲೀಸರು 11 ಮಂದಿಯನ್ನು ಬಂಧಿಸಿದ್ದಾರೆ.
ಶಿವಾಜಿನಗರ ಬಸ್ ನಿಲ್ದಾಣದ ಸಮೀಪ ಜಿಬಿಎ ಅಧಿಕಾರಿಗಳು ಫುಟ್ಪಾತ್ ಮೇಲಿನ ಅಕ್ರಮ ಒತ್ತುವರಿ ತೆರವುಗೊಳಿಸುವ ಕಾರ್ಯಾಚರಣೆಯಲ್ಲಿ ನಿರತರಾಗಿದ್ದರು. ಈ ವೇಳೆ ಪ್ರಮುಖ ಆರೋಪಿ ಬಸವರಾಜ ಪಡುಕೋಟೆ ಹಾಗೂ ಆತನ ಬೆಂಬಲಿಗರು ಸ್ಥಳಕ್ಕೆ ಆಗಮಿಸಿ ಕೆಲಸಕ್ಕೆ ಅಡ್ಡಿ ಮಾಡಿ ವಾಗ್ವಾದ ಮಾಡಿದ್ದಾರೆ.
ಮಾತಿಗೆ ಮಾತು ಬೆಳೆದು ಕಡೆಗೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ. ಬಸ್ ಸ್ಟ್ಯಾಂಡ್ ಬಳಿ ಬೆಳಿಗ್ಗೆಯಿಂದ ತೆರವು ಕಾರ್ಯಾಚರಣೆ ನಡೆಯುತ್ತಿದ್ದಾಗ, ಮಧ್ಯಾಹ್ನ 12:30ರ ಸುಮಾರಿಗೆ ಇನ್ನೋವಾ ಕಾರಿನಲ್ಲಿ ಬಂದ ಬಸವರಾಜ್ ಪಡುಕೋಟೆ ಹಾಗೂ ಆತನ ಗ್ಯಾಂಗ್ ಏಕಾಏಕಿ ಅಧಿಕಾರಿಗಳ ಮೇಲೆ ಮುಗಿಬಿದ್ದಿದೆ.
ಸಹಾಯಕ ಕಾರ್ಯಪಾಲಕ ಅಭಿಯಂತರ ಮಾಧವ್ ರಾವ್ ಅವರ ಮೇಲೆ ಅಪರಿಚಿತರು ಅಟ್ಟಾಡಿಸಿಕೊಂಡು ಹಲ್ಲೆ ನಡೆಸಿದ್ದು, ತಳ್ಳಿದ ರಭಸಕ್ಕೆ ಅಧಿಕಾರಿ ಕೆಳಗೆ ಬಿದ್ದಿದ್ದಾರೆ. ಅಲ್ಲದೆ ಹೆಲ್ಮೆಟ್ ಹಾಗೂ ಪ್ಲಾಸ್ಟಿಕ್ ಚೇರ್ಗಳಿಂದ ಮನಸೋಇಚ್ಛೆ ಹೊಡೆಯಲಾಗಿದೆ. ಕಾರ್ಯಾಚರಣೆ ವೇಳೆ ಸ್ಥಳದಲ್ಲಿ ನಾಲ್ಕು ಜನ ಪೊಲೀಸರಿದ್ದರೂ ಯಾವುದೇ ಕ್ರಮ ಕೈಗೊಳ್ಳದೆ ಸುಮ್ಮನೆ ವೀಡಿಯೋ ಮಾಡುತ್ತಾ ನಿಂತಿದ್ದರು ಎಂಬ ಗಂಭೀರ ಆರೋಪ ಕೇಳಿಬಂದಿದೆ.



