ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ನಾಳೆ, ಜುಲೈ 23ರ ಗುರುವಾರದಂದು ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ.
ಭಾರತೀಯ ಹವಾಮಾನ ಇಲಾಖೆ (IMD) ಜಿಲ್ಲೆಯಲ್ಲಿ ‘ಯೆಲ್ಲೋ ಅಲರ್ಟ್’ ಮುನ್ಸೂಚನೆ ನೀಡಿರುವ ಕಾರಣ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಹಾಗೂ ಎಲ್ಲಾ ವಸತಿ ಶಾಲೆಗಳು ಮತ್ತು ಪದವಿ ಪೂರ್ವ (ಪಿಯುಸಿ) ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಜಿಲ್ಲಾಡಳಿತದ ಕಟ್ಟುನಿಟ್ಟಿನ ಮುನ್ನೆಚ್ಚರಿಕೆಗಳು
ಸಾರ್ವಜನಿಕರು ಮತ್ತು ಪ್ರವಾಸಿಗರು ನದಿ, ಸಮುದ್ರ ತೀರ ಹಾಗೂ ತಗ್ಗು ಪ್ರದೇಶಗಳಿಗೆ ಭೇಟಿ ನೀಡುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಮಕ್ಕಳು ನೀರು ನಿಲ್ಲುವ ಹೊಂಡ ಹಾಗೂ ನದಿ ತೀರದತ್ತ ಹೋಗದಂತೆ ಪೋಷಕರು ವಿಶೇಷ ನಿಗಾ ವಹಿಸಬೇಕು. ಕಡಲು ಪ್ರಕ್ಷುಬ್ಧವಾಗಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.



