ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೊಡಗು ಜಿಲ್ಲೆಯಲ್ಲಿ ಮಳೆಯ ಕೊರತೆ ಶೇಕಡಾ 45ರಷ್ಟು ಕಾಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಮಳೆಯಾಶ್ರಿತ ಭತ್ತದ ಕೃಷಿಗೆ ತೀವ್ರ ಹಿನ್ನಡೆಯುಂಟಾಗಿದೆ.
ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಭತ್ತ ಸೇರಿದಂತೆ ಅಲ್ಪಪ್ರಮಾಣದಲ್ಲಿ ಮುಸುಕಿನ ಜೋಳ, ರಾಗಿ, ಅಲಸಂದೆ, ಹೆಸರು ಬೆಳೆಯಲಾಗುತ್ತಿದೆ. ಒಟ್ಟಾರೆ 19,375 ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ನಡೆಸುವ ಗುರಿ ಹೊಂದಲಾಗಿದೆಯಾದರೂ, ಪ್ರಸ್ತುತ ಮಳೆಯ ಕೊರತೆಯಿಂದ ಇಲ್ಲಿಯವರೆಗೆ ಕೇವಲ 1,927.5 ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಬಿತ್ತನೆ ಕಾರ್ಯ ನಡೆದಿದೆ. ಜಿಲ್ಲೆಯಲ್ಲಿ ಕೃಷಿ ಇಲಾಖೆ ಭತ್ತದ ಕೃಷಿಯನ್ನು 17,500 ಹೆಕ್ಟೇರ್ ಪ್ರದೇಶದಲ್ಲಿ ನಡೆಸುವ ಗುರಿ ಹೊಂದಿದ್ದು, ಇಲ್ಲಿಯವರೆಗೆ ಕೇವಲ ಮಳೆಯಾಶ್ರಿತ 302.5 ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಬಿತ್ತನೆ ಕಾರ್ಯ ನಡೆದಿದೆ.
ಇದನ್ನೂ ಓದಿ:
ಹಾರಂಗಿ ನೀರನ್ನು ಬಳಸಿ 2,000 ಹೆಕ್ಟೇರ್ ಪ್ರದೇಶದಲ್ಲಿ ಭತ್ತದ ಕೃಷಿ ನಡೆಸಲಾಗುತ್ತದೆಯಾದರೂ, ಈ ಪ್ರದೇಶಗಳಲ್ಲಿ ನೀರು ಲಭ್ಯವಿಲ್ಲದ ಹಿನ್ನೆಲೆಯಲ್ಲಿ ನಾಟಿ ಕಾರ್ಯಗಳು ಇನ್ನೂ ಆರಂಭವಾಗಿಲ್ಲ. ಕುಶಾಲನಗರ ಮತ್ತು ಸೋಮವಾರಪೇಟೆ ವಿಭಾಗದಲ್ಲಿ ಮುಸುಕಿನ ಜೋಳ ಕೃಷಿಯನ್ನು 1,850 ಹೆಕ್ಟೇರ್ ಪ್ರದೇಶದಲ್ಲಿ ನಡೆಸುವ ಗುರಿ ಹೊಂದಲಾಗಿದ್ದು, ಇದರಲ್ಲಿ 1,580 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಕಾರ್ಯ ನಡೆದಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಡಾ. ಬಿ.ಎಸ್. ಚಂದ್ರಶೇಖರ್ ಮಾಹಿತಿ ನೀಡಿದ್ದಾರೆ.



