July 23, 2026
Thursday, July 23, 2026
spot_img

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ರಂಪಾಟ: ದೆಹಲಿಯ ಗಾಂಧಿ ಸ್ಮೃತಿಯಲ್ಲಿ ಪ್ರತಿಪಕ್ಷಗಳ ಬೃಹತ್ ಪ್ರತಿಭಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ ಪ್ರತಿಭಟಿಸುತ್ತಿರುವ ಅಭ್ಯರ್ಥಿಗಳಿಗೆ ‘ಇಂಡಿಯಾ’ (INDIA) ಒಕ್ಕೂಟ ಸಂಪೂರ್ಣ ಬೆಂಬಲ ಘೋಷಿಸಿದೆ. ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಮುಖಂಡತ್ವದಲ್ಲಿ ಮೈತ್ರಿಕೂಟದ ಸಂಸದರು ದೆಹಲಿಯ ‘ತೀಸ್ ಜನವರಿ ಮಾರ್ಗ’ದಲ್ಲಿರುವ ಗಾಂಧಿ ಸ್ಮೃತಿಗೆ ಬಸ್‌ಗಳ ಮೂಲಕ ತೆರಳಿ ಬೃಹತ್ ಜಾಥಾ ನಡೆಸಿದರು.

ಆತ್ಮಹತ್ಯೆ ಮಾಡಿಕೊಂಡ ಅಭ್ಯರ್ಥಿಗಳಿಗೆ ಶ್ರದ್ಧಾಂಜಲಿ

ಪ್ರಶ್ನೆಪತ್ರಿಕೆ ಸೋರಿಕೆಯಿಂದ ಕಂಗೆಟ್ಟು ಜೀವ ಕಳೆದುಕೊಂಡ ಅಭ್ಯರ್ಥಿಗಳಿಗೆ ನಮನ ಸಲ್ಲಿಸುವುದು ಮತ್ತು ಪೊಲೀಸರ ಲಾಠಿಚಾರ್ಜ್‌ಗೆ ಒಳಗಾದ ಯುವಜನರಿಗೆ ಆತ್ಮಸ್ಥೈರ್ಯ ತುಂಬುವುದು ಈ ಪ್ರತಿಭಟನಾ ಮೆರವಣಿಗೆಯ ಮುಖ್ಯ ಉದ್ದೇಶವಾಗಿತ್ತು. ಈ ಹೋರಾಟದಲ್ಲಿ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ ಸೇರಿದಂತೆ ತೃಣಮೂಲ ಕಾಂಗ್ರೆಸ್, ಸಮಾಜವಾದಿ ಪಾರ್ಟಿ, ಎನ್‌ಸಿಪಿ ಹಾಗೂ ಶಿವಸೇನೆ (ಯುಬಿಟಿ) ಪಕ್ಷಗಳ ಪ್ರಮುಖ ಮುಖಂಡರು ಭಾಗವಹಿಸಿದ್ದರು.

ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

ಈ ವೇಳೆ ಮಾತನಾಡಿದ ನಾಯಕರು, “ಮಹಾತ್ಮ ಗಾಂಧೀಜಿಯವರ ಹತ್ಯೆಯಾದ ಪವಿತ್ರ ಸ್ಥಳದಲ್ಲೇ ಇಂದು ಕೇಂದ್ರ ಸರ್ಕಾರವು ದೇಶದ ಪ್ರಜಾಪ್ರಭುತ್ವ ಮತ್ತು ವಿದ್ಯಾರ್ಥಿಗಳ ಭವಿಷ್ಯವನ್ನು ಬಲಿ ಪಡೆಯುತ್ತಿದೆ. ಯುವಜನರ ಮೇಲಿನ ಇಂತಹ ದೌರ್ಜನ್ಯವನ್ನು ನಾವು ಸಹಿಸುವುದಿಲ್ಲ. ಪ್ರಧಾನಿ ನರೇಂದ್ರ ಮೋದಿಯವರು ಕೂಡಲೇ ಕೇಂದ್ರ ಶಿಕ್ಷಣ ಸಚಿವರನ್ನು ಹುದ್ದೆಯಿಂದ ತೆಗೆದುಹಾಕಿ, ದೇಶದ ಸಮಸ್ತ ವಿದ್ಯಾರ್ಥಿ ಸಮುದಾಯದ ಕ್ಷಮೆಯಾಚಿಸಬೇಕು” ಎಂದು ತೀವ್ರವಾಗಿ ಆಗ್ರಹಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !