ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ತಮಿಳುನಾಡಿಗೆ 15 ದಿನಗಳ ಕಾಲ 3,500 ಕ್ಯೂಸೆಕ್ ನೀರು ಬಿಡುಗಡೆ ಮಾಡುವ ಕುರಿತು ಕಾವೇರಿ ಜಲ ನಿಯಂತ್ರಣ ಸಮಿತಿ ನೀಡಿರುವ ನಿರ್ದೇಶನವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಬೇಕೇ ಎಂಬುದರ ಬಗ್ಗೆ ರಾಜ್ಯ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ ಎಂದು ಜಲಸಂಪನ್ಮೂಲ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.
ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿತ ಹಾಗೂ ಕುಡಿಯುವ ನೀರಿನ ಅಗತ್ಯವನ್ನು ಉಲ್ಲೇಖಿಸಿ ಅವರು ಈ ಹೇಳಿಕೆ ನೀಡಿದ್ದಾರೆ. ತಮಿಳುನಾಡಿಗೆ ನೀರು ನೀಡಬೇಕು ಎನ್ನುವ ನಿರ್ದೇಶದ ಬರುತ್ತಿದ್ದಂತೆಯೇ ರಾಜ್ಯದಲ್ಲಿ ಪರಿಸ್ಥಿತಿ ಬಿಗಡಾಯಿಸಿದೆ. ನಮಗೆ ಕುಡಿಯಲು ನೀರಿಲ್ಲದಿರುವಾಗ ತಮಿಳುನಾಡಿಗೆ ಹೇಗೆ ನೀರು ಬಿಡಲು ಸಾಧ್ಯ? ರಕ್ತ ಕೊಡುತ್ತೇವೆ ಆದರೆ ನೀರು ಕೊಡೋದಿಲ್ಲ ಎಂದು ರೈತರು ರಸ್ತೆಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಚರ್ಚಿಸಿ ನಂತರ ಮಾತನಾಡುತ್ತೇವೆ. 15 ದಿನಗಳಲ್ಲಿ ಸುಮಾರು 4 ಟಿಎಂಸಿ (ಸಾವಿರ ಮಿಲಿಯನ್ ಘನ ಅಡಿ) ನೀರನ್ನು ಬಿಡುಗಡೆ ಮಾಡುವಂತೆ ಸೂಚನೆ ನೀಡಿದೆ. ಆದರೆ ಕರ್ನಾಟಕ ಈಗಾಗಲೇ ನೀರಿನ ಕೊರತೆಯನ್ನು ಎದುರಿಸುತ್ತಿದೆ ಎಂದು ಹೇಳಿದರು. ನಾವು ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ಮುಂದೆ ಮೇಲ್ಮನವಿ ಸಲ್ಲಿಸಬಹುದು. ಅದರ ಬಗ್ಗೆ ಪ್ರಾಧಿಕಾರವೇ ತೀರ್ಮಾನ ಕೈಗೊಳ್ಳಬೇಕು. ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಮೇಲ್ಮನವಿ ಸಲ್ಲಿಸಬೇಕೇ ಬೇಡವೇ ಎಂಬುದನ್ನು ನಿರ್ಧರಿಸುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.



