ಹೊಸದಿಗಂತ ಡಿಜಿಟಲ್ ಡೆಸ್ಕ್:
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿಸಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿದ್ದ ಆರೋಪಕ್ಕೆ ಕೇಂದ್ರ ಸರ್ಕಾರ ತೀವ್ರ ತಿರುಗೇಟು ನೀಡಿದೆ.
ಲೋಕಸಭೆಯಲ್ಲಿ ಮಾತನಾಡಿದ ಕೇಂದ್ರ ಸಚಿವ ಜಿತೇಂದ್ರ ಸಿಂಗ್, ಗೃಹ ಸಚಿವ ಅಮಿತ್ ಶಾ ಗುಂಡು ಹಾರಿಸಲು ಆದೇಶ ನೀಡಿದ್ದಾರೆ ಎಂಬ ಆರೋಪಕ್ಕೆ ಯಾವುದೇ ಆಧಾರವಿಲ್ಲ ಎಂದು ಸ್ಪಷ್ಟಪಡಿಸಿದರು.
‘ಆಡಳಿತ ವ್ಯವಸ್ಥೆಯ ಅರಿವು ಇಲ್ಲ’
ರಾಹುಲ್ ಗಾಂಧಿಗೆ ಆಡಳಿತ ವ್ಯವಸ್ಥೆಯ ಬಗ್ಗೆ ಸರಿಯಾದ ತಿಳುವಳಿಕೆ ಇಲ್ಲ ಎಂದು ಟೀಕಿಸಿದ ಜಿತೇಂದ್ರ ಸಿಂಗ್, ಯಾವುದೇ ಸಂದರ್ಭದಲ್ಲೂ ಗುಂಡು ಹಾರಿಸಲು ಆದೇಶ ನೀಡುವ ಅಧಿಕಾರ ಸಚಿವರಿಗೆ ಇಲ್ಲ. ಅಂತಹ ಆದೇಶವನ್ನು ಮ್ಯಾಜಿಸ್ಟ್ರೇಟ್ ಅಥವಾ ಎಸ್ಡಿಎಂ ಮಾತ್ರ ನೀಡಬಹುದು ಎಂದು ಹೇಳಿದರು.
ಇದನ್ನೂ ಓದಿ:
‘ಗುಂಡು ಹಾರಿಸಿಲ್ಲ, ಅಶ್ರುವಾಯು ಬಳಸಲಾಗಿದೆ’
ವಿದ್ಯಾರ್ಥಿಗಳ ವಿರುದ್ಧ ಗುಂಡು ಹಾರಿಸಲಾಗಿದೆ ಎಂಬ ಆರೋಪವನ್ನು ಕೇಂದ್ರ ಸರ್ಕಾರ ತಳ್ಳಿಹಾಕಿದೆ. ಪ್ರತಿಭಟನೆ ವೇಳೆ ಗುಂಡಿನ ದಾಳಿ ನಡೆದಿಲ್ಲ, ಕೇವಲ ಅಶ್ರುವಾಯು (ಟಿಯರ್ ಗ್ಯಾಸ್) ಬಳಸಲಾಗಿದೆ. ಹೀಗಾಗಿ ಗುಂಡು ಹಾರಿಸಲು ಆದೇಶ ನೀಡಿದ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಜಿತೇಂದ್ರ ಸಿಂಗ್ ಸ್ಪಷ್ಟಪಡಿಸಿದರು.
ಲೋಕಸಭೆಯಲ್ಲಿ ವಾಕ್ಸಮರ
ಇದಕ್ಕೂ ಮೊದಲು ರಾಹುಲ್ ಗಾಂಧಿ, ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮಕ್ಕೆ ಗೃಹ ಸಚಿವ ಅಮಿತ್ ಶಾ ಹೊಣೆ ಎಂದು ಆರೋಪಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಆಧಾರರಹಿತ ಆರೋಪಗಳನ್ನು ಮಾಡಬಾರದು ಎಂದು ಆಕ್ಷೇಪ ವ್ಯಕ್ತಪಡಿಸಿದರು. ಈ ವಿಚಾರವಾಗಿ ಸದನದಲ್ಲಿ ಗದ್ದಲ ಉಂಟಾಗಿ ಕಲಾಪವನ್ನು ಎರಡು ಬಾರಿ ಮುಂದೂಡಲಾಯಿತು.



