ಹೊಸದಿಗಂತ ಡಿಜಿಟಲ್ ಡೆಸ್ಕ್:
ಕ್ರಿಕೆಟಿಗ ಯಶ್ ದಯಾಳ್ ವಿರುದ್ಧ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಅಲಹಾಬಾದ್ ಹೈಕೋರ್ಟ್ ಮಹತ್ವದ ಮಧ್ಯಂತರ ಆದೇಶ ನೀಡಿದೆ. ಆರೋಪಗಳಿಗೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ಪ್ರಕ್ರಿಯೆ ಹಾಗೂ ಸಮನ್ಸ್ಗೆ ತಾತ್ಕಾಲಿಕ ತಡೆ ನೀಡಿದ್ದು, ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ.
ವಿಚಾರಣೆಗೆ ತಡೆ
ಗಾಜಿಯಾಬಾದ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಹೊರಡಿಸಿದ್ದ ಸಮನ್ಸ್ ಹಾಗೂ ವಿಚಾರಣಾ ಪ್ರಕ್ರಿಯೆಯನ್ನು ಅಲಹಾಬಾದ್ ಹೈಕೋರ್ಟ್ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಪೊಲೀಸ್ ಆರೋಪಪಟ್ಟಿ ಮತ್ತು ಕಾಗ್ನಿಜನ್ಸ್ ಆದೇಶವನ್ನು ಪ್ರಶ್ನಿಸಿ ಯಶ್ ದಯಾಳ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯ ಈ ಆದೇಶ ನೀಡಿದೆ.
ಇದನ್ನೂ ಓದಿ:
ಏನಿದು ಆರೋಪ?
ಮಹಿಳೆಯೊಬ್ಬರು ನೀಡಿದ ದೂರಿನ ಪ್ರಕಾರ, ಮದುವೆಯಾಗುವುದಾಗಿ ನಂಬಿಸಿ ಹಲವು ವರ್ಷಗಳ ಕಾಲ ಸಂಬಂಧ ಹೊಂದಿದ ಬಳಿಕ ಯಶ್ ದಯಾಳ್ ಮದುವೆಗೆ ನಿರಾಕರಿಸಿ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಈ ದೂರಿನ ಆಧಾರದಲ್ಲಿ 2025ರಲ್ಲಿ ಪ್ರಕರಣ ದಾಖಲಾಗಿತ್ತು.
ಯಶ್ ದಯಾಳ್ ವಾದವೇನು?
ತಮ್ಮ ಅರ್ಜಿಯಲ್ಲಿ ಯಶ್ ದಯಾಳ್, ಸಂಬಂಧವು ಪರಸ್ಪರ ಸಮ್ಮತಿಯೊಂದಿಗೆ ನಡೆದಿದ್ದು, ಆರಂಭದಲ್ಲಿ ಮದುವೆಯ ಯಾವುದೇ ಭರವಸೆ ನೀಡಿರಲಿಲ್ಲ ಎಂದು ತಿಳಿಸಿದ್ದಾರೆ. ದೂರು ಮತ್ತು ಸಾಕ್ಷಿಗಳ ಹೇಳಿಕೆಗಳಲ್ಲಿಯೂ ಮದುವೆಯ ಭರವಸೆಯ ಸ್ಪಷ್ಟ ಉಲ್ಲೇಖವಿಲ್ಲ ಎಂದು ವಾದಿಸಿದ್ದಾರೆ. ತಮ್ಮ ವಿರುದ್ಧದ ಪ್ರಕರಣವು ಹಣಕ್ಕಾಗಿ ಒತ್ತಡ ಹೇರುವ ಉದ್ದೇಶದಿಂದ ದಾಖಲಿಸಲಾಗಿದೆ ಎಂಬ ಆರೋಪವನ್ನೂ ಅವರು ಮಾಡಿದ್ದಾರೆ.



