ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ತಲೆದೋರಿರುವ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ, ಮುಂದಿನ ಕಾನೂನು ಹೋರಾಟದ ಹಾದಿ ಮತ್ತು ರಾಜ್ಯದ ಹಿತರಕ್ಷಣೆ ಕುರಿತು ಚರ್ಚಿಸಲು ಭಾನುವಾರ (ಆಗಸ್ಟ್ 2) ಬೆಂಗಳೂರಿನ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಮಹತ್ವದ ಸರ್ವಪಕ್ಷ ಸಭೆ ಕರೆಯಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಮಹತ್ವದ ಸಭೆಗೆ ರಾಜ್ಯದ ಮಾಜಿ ಮುಖ್ಯಮಂತ್ರಿಗಳು, ಕಾವೇರಿ ಜಲಾನಯನ ಪ್ರದೇಶದ ಸಂಸದರು ಹಾಗೂ ಶಾಸಕರಿಗೆ ಆಹ್ವಾನ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು. ಇಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಮುಂದೆ ಮೇಲ್ಮನವಿ ಸಲ್ಲಿಸಲಾಗಿದ್ದು, ಮುಂದಿನ ದಿನಗಳಲ್ಲಿ ಈ ಜ್ವಲಂತ ಸಮಸ್ಯೆಯನ್ನು ಹೇಗೆ ಎದುರಿಸಬೇಕು ಎಂಬುದರ ಕುರಿತು ಸರ್ವಪಕ್ಷ ಸಭೆಯಲ್ಲಿ ವಿಸ್ತೃತವಾಗಿ ಚರ್ಚಿಸಲಾಗುವುದು ಎಂದರು.
ಇದನ್ನೂ ಓದಿ:
ರಾಜ್ಯದ ಹಿತಕ್ಕಾಗಿ ಒಗ್ಗಟ್ಟಿನ ಶ್ರಮ:
ಕಾವೇರಿ ವಿಷಯವಾಗಿ ಈಗಾಗಲೇ ದೆಹಲಿಯಲ್ಲಿ ಕೇಂದ್ರ ಸಚಿವರು ಹಾಗೂ ಸಂಸದರೊಂದಿಗೆ ಮಾತುಕತೆ ನಡೆಸಲಾಗಿದೆ. ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ವಿ. ಸೋಮಣ್ಣ, ಸಂಸದರಾದ ಜಗದೀಶ್ ಶೆಟ್ಟರ್ ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರೊಂದಿಗೆ ಸಮಾಲೋಚನೆ ನಡೆಸಲಾಗಿದ್ದು, ಪಕ್ಷಾತೀತವಾಗಿ ಅವರೆಲ್ಲರೂ ಕರ್ನಾಟಕದ ನೆಲ, ಜಲದ ಹಿತರಕ್ಷಣೆಗಾಗಿ ಶಕ್ತಿ ಮೀರಿ ಪ್ರಯತ್ನ ಮಾಡುತ್ತಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.



